ಬೆಂಗಳೂರು: ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರ ಮುಷ್ಕರದ ಸಂದರ್ಭದಲ್ಲಿ ವಜಾ, ಅಮಾನತು ಮತ್ತು ವರ್ಗಾವಣೆಗೊಂಡ 6,444 ಪ್ರಕರಣಗಳಲ್ಲಿ 4,344 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ವಿಧಾನಸಭೆಯಲ್ಲಿ ತಿಳಿಸಿದರು.
ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಅವರ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರ ನೀಡಿದರು. ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಲಾಗುವುದು ಎಂದು ಶ್ರೀರಾಮುಲು ತಿಳಿಸಿದರು.
ವಜಾ, ಅಮಾನತು, ವರ್ಗಾವಣೆ ವಿವರ ಹೀಗಿದೆ– ಕೆಎಸ್ಆರ್ಟಿಸಿ 1429, ಬಿಎಂಟಿಸಿ 3787, ಎನ್ಡಬ್ಲ್ಯೂಕೆಎಸ್ಆರ್ಟಿಸಿ 885, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ 343, ಒಟ್ಟು 6444 ಪ್ರಕರಣಗಳು ದಾಖಲಾಗಿದ್ದವು ಎಂದರು.
ನಿಗಮಗಳ ವಿಲೀನಕ್ಕೆ ಒತ್ತಾಯ
‘ಸಾರಿಗೆ ಸಂಸ್ಥೆಗಳನ್ನು ನಷ್ಟದಿಂದ ಮೇಲೆತ್ತಲುನಾಲ್ಕು ನಿಗಮಗಳನ್ನು ವಿಲೀನಗೊಳಿಸಬೇಕು’ ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಒತ್ತಾಯಿಸಿದರು.
‘ಮಂಗಳವಾರ ನಡೆದ ಸಭೆಯಲ್ಲಿ ಸಾರಿಗೆ ಸಚಿವರಿಗೂ ಮನವರಿಕೆ ಮಾಡಿಕೊಡಲಾಗಿದೆ. ನಾಲ್ಕು ನಿಗಮಗಳಿಗೆ ನಾಲ್ವರು ಅಧ್ಯಕ್ಷ, ಉಪಾಧ್ಯಕ್ಷ, ಸಿಬ್ಬಂದಿ ವೆಚ್ಚ ಸೇರಿ ₹150 ಕೋಟಿ ಉಳಿತಾಯ ಸಾಧ್ಯವಿದೆ ಎಂಬ ಸಲಹೆ ನೀಡಲಾಗಿದೆ’ ಎಂದು ವಿವರಿಸಿದರು.
ಅಮಾನತು ಮತ್ತು ವಜಾಗೊಂಡಿದ್ದ ನೌಕರರ ಪುನರ್ ನೇಮಕಕ್ಕೆ ಕೂಡಲೇ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.