ಬೆಂಗಳೂರು: ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ವ್ಯಾಪ್ತಿಯಲ್ಲಿರುವ ಗಾಯಗೊಂಡಿರುವ ಆನೆ ಮರಿಯೊಂದಕ್ಕೆ ತಕ್ಷಣ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಭಾರತ್ ಜೋಡೋ ಯಾತ್ರೆಗೆ ವಿರಾಮ ನೀಡಿರುವ ಕಾರಣದಿಂದ ರಾಹುಲ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ನಾಗರಹೊಳೆಯಲ್ಲಿ ಮಂಗಳವಾರ ಸಫಾರಿಗೆ ತೆರಳಿದ್ದರು. ಆಗ, ತಾಯಿಯ ಜತೆಗಿದ್ದ ಆನೆ ಮರಿಯೊಂದು ತೀವ್ರವಾಗಿ ಗಾಯಗೊಂಡಿರುವುದನ್ನು ಕಂಡಿದ್ದರು. ಈ ಕುರಿತು ಮುಖ್ಯಮಂತ್ರಿಗೆ ಬುಧವಾರ ಪತ್ರ ಬರೆದು ಮಾಹಿತಿ ನೀಡಿದ್ದಾರೆ.
‘ತಾಯಿಯ ಜತೆಗಿದ್ದ ಚಿಕ್ಕ ಆನೆ ಮರಿಯ ಬಾಲ ಮತ್ತು ಸೊಂಡಿಲಿಗೆ ಗಾಯಗಳಾಗಿವೆ. ಅದು ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ. ನಿಸರ್ಗ ಸಹಜವಾಗಿಯೇ ಪ್ರಕ್ರಿಯೆಗಳು ನಡೆಯಬೇಕು ಎಂಬ ಅಭಿಪ್ರಾಯ ಇದೆ. ಆದರೂ, ಅಳಿವಿನಂಚಿನಲ್ಲಿರುವ ಪ್ರಭೇದದ ಜೀವಿಗಳು ಮತ್ತು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅಂತಹ ಅಭಿಪ್ರಾಯದ ಹೊರತಾಗಿ ಯೋಚಿಸಬೇಕಾಗುತ್ತದೆ. ಈ ಆನೆ ಮರಿಗೆ ತುರ್ತಾಗಿ ವೈದ್ಯಕೀಯ ನೆರವು ಬೇಕಿರುವುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
‘ಆನೆ ಮರಿಗೆ ಚಿಕಿತ್ಸೆ ನೀಡಿ, ಅದನ್ನು ರಕ್ಷಿಸುವ ವಿಚಾರದಲ್ಲಿ ರಾಜಕೀಯ ಗಡಿಗಳನ್ನು ಮೀರಿ ನಾನು ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ಸರಿಯಾದ ಚಿಕಿತ್ಸೆ ಲಭಿಸಿದರೆ ಆ ಮರಿಯು ಜೀವಂತವಾಗಿ ಉಳಿಯುತ್ತದೆ ಎನ್ನುವ ವಿಶ್ವಾಸವಿದೆ. ಈ ಆನೆ ಮರಿಯ ಜೀವ ಉಳಿಸಲು ನೀವು ಸಕಾಲಕ್ಕೆ ನೆರವು ನೀಡುತ್ತೀರಿ ಎಂಬ ಭರವಸೆ ಇದೆ’ ಎಂದು ರಾಹುಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.