
ತುಂಗಭದ್ರಾ ಜಲಾಶಯ
ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರೆಸ್ಟ್ ಗೇಟ್ಗಳನ್ನು ಅಳವಡಿಸಲು ನೀಡಿದ್ದ ಮೊದಲ ಕಂತಿನ ₹10 ಕೋಟಿಯನ್ನು ಸರ್ಕಾರ ವಾಪಸ್ ಪಡೆದಿದ್ದಕ್ಕೆ ಬಿಜೆಪಿ, ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿವೆ. ಮುಂಬರುವ ದಿನಗಳಲ್ಲಿ ಹೋರಾಟ ನಡೆಸುವ ಎಚ್ಚರಿಕೆ ನೀಡಿವೆ.
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್ ಅವರು, ‘ಸರ್ಕಾರ ಹಣ ವಾಪಸ್ ಪಡೆದು ಈ ಭಾಗದ ರೈತರಿಗೆ ಅನ್ಯಾಯ ಮಾಡಿದೆ. ಈ ವಿಷಯ ತಿಳಿದಿದ್ದರೂ ಕಾಂಗ್ರೆಸ್ ಮುಖಂಡರು ಮೌನವಾಗಿದ್ದಾರೆ. ಈ ಮೂಲಕ ಜನತೆಗೆ ಮೋಸ ಮಾಡುತ್ತಿದ್ದಾರೆ’ ಎಂದಿದ್ದಾರೆ. ‘ಇದು ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಸಾಕ್ಷಿ’ ಎಂದೂ ಟೀಕಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ‘ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ಈಗಾಗಲೇ ಎರಡನೇ ಬೆಳೆಗೆ ನೀರಿಲ್ಲದೆ ಕಂಗಾಲಾಗಿರುವ ರೈತರು, ರಾಜ್ಯ ಸರ್ಕಾರದ ಇಂಥ ನಡೆಯಿಂದ ಮತ್ತಷ್ಟು ಸಮಸ್ಯೆ ಅನುಭವಿಸಲಿದ್ದಾರೆ. ತ್ವರಿತವಾಗಿ ಹಣ ಕೊಡದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.