ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಶಾಸಕ ರಾಮಲಿಂಗಾರೆಡ್ಡಿ, ಧ್ರುವನಾರಾಯಣ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐವರು ಕಾರ್ಯಾಧ್ಯಕ್ಷರು
ಕೆಪಿಸಿಸಿಗೆ ದಿನೇಶ್ ಗುಂಡೂರಾವ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದಾಗ ಈಶ್ವರ ಖಂಡ್ರೆ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಬಳಿಕ ಎಸ್.ಆರ್. ಪಾಟೀಲರಿಗೂ ಈ ಸ್ಥಾನ ನೀಡಲಾಗಿತ್ತು. ಲೋಕಸಭೆ ಚುನಾವಣೆ ಸೋಲಿನ ಬಳಿಕ ಪಾಟೀಲರು ರಾಜೀನಾಮೆ ನೀಡಿದ್ದರು. ಈಗ ಕಾರ್ಯಾಧ್ಯಕ್ಷರ ಸಂಖ್ಯೆಯನ್ನು ಐದಕ್ಕೆ ಏರಿಸಲಾಗಿದೆ.
ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಸಲೀಂ ಅಹಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
ಪಕ್ಷದ ಬಲವರ್ಧನೆ ಲೆಕ್ಕಾಚಾರ
ಸದ್ಯದಲ್ಲೇ ಬಿಬಿಎಂಪಿ ಚುನಾವಣೆ ಇರುವ ಹಿನ್ನಲೆಯಲ್ಲಿ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಿರಿಯ ಶಾಸಕರಾಗಿರುವ ರಾಮಲಿಂಗಾರೆಡ್ಡಿ ಹಾಗೂ ಕೆಪಿಸಿಸಿ ವಕ್ತಾರ ಆರ್.ಧ್ರುವನಾರಾಯಣ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿದೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.