ADVERTISEMENT

ಯುಕೆಪಿ–3| ಪರಿಹಾರ ದರ ನಿಗದಿ: 3 ವರ್ಷಗಳಲ್ಲಿ ಪಾವತಿಗೆ ಸಂಪುಟ ತೀರ್ಮಾನ; ಸಿಎಂ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 15:18 IST
Last Updated 16 ಸೆಪ್ಟೆಂಬರ್ 2025, 15:18 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಪ್ರಜಾವಾಣಿ ವಾರ್ತೆ

ಬೆಂಗಳೂರು: ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 519.6 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸುವ ‘ಕೃಷ್ಣಾ ಮೇಲ್ದಂಡೆ ಯೋಜನೆ–3’ ನೇ ಹಂತದ ಯೋಜನೆಗಾಗಿ ಮುಳುಗಡೆ ಆಗುವ ಮತ್ತು ನಾಲೆಗಾಗಿ ಸ್ವಾಧೀನಪಡಿಸಿಕೊಳ್ಳುವ ಜಮೀನಿಗೆ ಮಂಗಳವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಹಾರದ ದರ ನಿಗದಿ ಮಾಡಲಾಗಿದೆ.

ADVERTISEMENT

2023‌ರಿಂದ ನನೆಗುದಿಯಲ್ಲಿದ್ದ ದರ ನಿಗದಿ ವಿಚಾರ ಇದೀಗ ತಾರ್ಕಿಕ ಅಂತ್ಯವನ್ನು ತಲುಪಿದೆ. ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಲ ಸಂಪನ್ಮೂಲ ಸಚಿವರೂ ಆಗಿರುವ  ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಸಿದ್ದರಾಮಯ್ಯ ಮಾತನಾಡಿ, ‘ಪರಿಹಾರ ನಿಗದಿ ಮಾಡುವ ವಿಚಾರವಾಗಿ ರೈತರು, ಹೋರಾಟ ನಿರತ ಸಂಘಟನೆಗಳ ಮುಖಂಡರು, ಶಾಸಕರು ಮತ್ತು ಸಚಿವರ ಜತೆ ಹಲವು ಸುತ್ತಿನ ಚರ್ಚೆ ನಡೆಸಿದ್ದೇವೆ. ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ನೀರಾವರಿ ಜಮೀನಿಗೆ ಎಕರೆಗೆ ₹40 ಲಕ್ಷ ಮತ್ತು ಒಣ ಭೂಮಿಗೆ ಎಕರೆಗೆ ₹30 ಲಕ್ಷ ಪರಿಹಾರ ನೀಡಲು ಒಪ್ಪಿಗೆ ನೀಡಲಾಗಿದೆ’ ಎಂದರು.

ಅಲ್ಲದೇ, ಕಾಲುವೆಗಾಗಿ ಸುಮಾರು 51,837 ಎಕರೆ ಬೇಕಾಗುತ್ತದೆ. ಇದರಲ್ಲಿ 23,631 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ನಡೆಸಿ, ಕಾಮಗಾರಿ ಕೈಗೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಜಮೀನಿಗೆ ಸಂಬಂಧಿಸಿದಂತೆ ನೀರಾವರಿ ಜಮೀನಿಗೆ ಎಕರೆಗೆ ₹30 ಲಕ್ಷ ಮತ್ತು ಒಣ ಭೂಮಿಗೆ ಎಕರೆಗೆ ₹25 ಲಕ್ಷ ದರ ನಿಗದಿ ಮಾಡಲು ತೀರ್ಮಾನಿಸಲಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡವರು ಯೋಜನೆಯ ಫಲಾನುಭವಿಗಳಾಗುತ್ತಾರೆ. ಆದ್ದರಿಂದ ಕಡಿಮೆ ದರ ನಿಗದಿ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಅಣೆಕಟ್ಟಿನ ಎತ್ತರ ಹೆಚ್ಚಿಸುವುದರಿಂದ ಹಿನ್ನೀರಿನಿಂದ ಸುಮಾರು 75 ಸಾವಿರ ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುತ್ತದೆ. 5.94 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಒದಗಿಸಬಹುದು. ಇದರಿಂದ ಈ ಭಾಗದ ಜನರ ಜೀವನಮಟ್ಟವೂ ಸುಧಾರಣೆ ಆಗಲಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್‌.ಕೆ.ಪಾಟೀಲ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.