ADVERTISEMENT

ನಾನೂ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧಿ: ಸಚಿವ ಉಮೇಶ ಕತ್ತಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 21:38 IST
Last Updated 28 ಜೂನ್ 2021, 21:38 IST
ಉಮೇಶ ಕತ್ತಿ
ಉಮೇಶ ಕತ್ತಿ   

ಆಲಮಟ್ಟಿ (ವಿಜಯಪುರ): ‘ಅವಕಾಶ, ದೈವಬಲ, ಜನಬಲವಿದ್ದರೆ ಎರಡೂವರೆ ವರ್ಷಗಳ ಬಳಿಕ ನಾನು ಕೂಡ ಮುಖ್ಯಮಂತ್ರಿಯಾಗಬಹುದು. ಎಂಟು ಬಾರಿ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ ಅನುಭವ ಇದೆ, ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ’ ಎಂದು ಸಚಿವ ಉಮೇಶ ಕತ್ತಿ ಹೇಳಿದರು.

ಆಲಮಟ್ಟಿಯ ಜಲಾಶಯದಲ್ಲಿ ಸೋಮವಾರ ನೀರಿನ ಸಂಗ್ರಹಣೆ, ಪ್ರವಾಹ ನಿಯಂತ್ರಣದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಜಲಾಶಯ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಮುಂದಿನ ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಖಾಲಿಯಿದ್ದರೆನಾನೂ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧಿಯೇ. ಸದ್ಯಕ್ಕೆ ಯಡಿಯೂರಪ್ಪ ನವರೇ ನಮ್ಮ ಮುಖ್ಯಮಂತ್ರಿ’ ಎಂದೂ ಅವರು ಸ್ಪಷ್ಟಪಡಿಸಿದರು.

ADVERTISEMENT

‘ಅಸಮಾನತೆ ನಿವಾರಣೆಗಾಗಿ, ಪ್ರತ್ಯೇಕ ರಾಜ್ಯಕ್ಕಾಗಿ ಧ್ವನಿಯೆತ್ತಿದ್ದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾದಾಗ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ನಾನು ಹೋರಾಡುವೆ’ ಎಂದು ಉಮೇಶ್ ಕತ್ತಿ ಹೇಳಿದರು.

ಕಾಂಗ್ರೆಸ್ ಹಗಲುಗನಸು: ‘ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಕೂಸು ಹುಟ್ಟುವ ಮುನ್ನವೇ ಕುಲಾಯಿ ಎನ್ನುವ ಹಾಗೆ ಜಾತಿವಾರು ಮುಖ್ಯಮಂತ್ರಿಯಾಗಲು ಹಗಲುಗನಸು ಕಾಣುತ್ತಿದ್ದಾರೆ’ ಎಂದು ಅವರು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.