ADVERTISEMENT

ಮುಂದಿನ ನಡೆ ಬಗ್ಗೆ ಜನಾಭಿಪ್ರಾಯ ಸಂಗ್ರಹ: ಶಾಸಕ ಜಾಧವ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2019, 19:05 IST
Last Updated 15 ಫೆಬ್ರುವರಿ 2019, 19:05 IST
ಡಾ.ಉಮೇಶ ಜಾಧವ
ಡಾ.ಉಮೇಶ ಜಾಧವ   

ಕಲಬುರ್ಗಿ: ‘ಲಂಬಾಣಿ ಸಮಾಜದ ಒಬ್ಬರಾದರೂ ಸಂಸದ ಇರಬೇಕು ಎಂದುಕುಲಗುರು ಡಾ.ರಾಮರಾವ ಮಹಾರಾಜರು ಬಯಸಿದ್ದಾರೆ. ನನ್ನ ವಿಚಾರದಲ್ಲೂ ಅವರೇ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ನಾನು ಮುಂದೆ ಯಾವ ಹೆಜ್ಜೆ ಇಡಬೇಕು ಎಂಬುದರ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸುತ್ತಿದ್ದೇನೆ’ ಎಂದು ಚಿಂಚೋಳಿ ಶಾಸಕ ಡಾ.ಉಮೇಶ ಜಾಧವ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಶಾಸಕತ್ವ ಅನರ್ಹಗೊಳಿಸಲು ಸಾಧ್ಯವಿಲ್ಲ. ಹಾಗೇನಾದರೂ ಮಾಡಿದರೆ ಕಾನೂನು ಹೋರಾಟ ಮಾಡುತ್ತೇನೆ. ಕಾಂಗ್ರೆಸ್‌ ಮುಖಂಡರು ನನಗೆ ಸಚಿವ ಸ್ಥಾನ ಕೊಡುತ್ತೇನೆ ಎಂದರೂ ನಾನು ಒಪ್ಪಲು ತಯಾರಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕಲಬುರ್ಗಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವ ತಯಾರಿ ನಡೆಸಿದ್ದು ನಿಜವೇ? ಎಂಬ ಪ್ರಶ್ನೆಗೆ ತಮಾಶೆಯಾಗಿ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ನಿಂದ ಟಿಕೆಟ್‌ ಕೊಟ್ಟರೂ ಓಕೆ’ ಎಂದರು.

ADVERTISEMENT

‘ನನ್ನ ರಾಜಕೀಯ ಜೀವನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕ್ಲೈಮ್ಯಾಕ್ಸ್‌ ಏನೆಂದು ಜಿಲ್ಲೆಯ ಜನರಿಗೆ ಈಗಾಗಲೇ ಸ್ಪಷ್ಟವಾಗಿ ಗೊತ್ತಾಗಿದೆ’ ಎಂದೂ ಹೇಳಿದರು.

ವಾಡಿಯಲ್ಲಿಮಾತನಾಡಿದ ಅವರು,‘ಬಿಜೆಪಿಯಿಂದ ₹50 ಕೋಟಿ ಪಡೆದಿದ್ದೇನೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ. ಒಂದು ವೇಳೆ ಯಾರೇ ಆಗಲಿ ಹಣ ಪಡೆದಿದ್ದು ಸಾಬೀತು ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದರು.

‘ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಯಾವುದೇ ಸರ್ಕಾರವಿರಲಿ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಚಿಂಚೋಳಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗುತ್ತಿದೆ. ತೆಲಂಗಾಣವು ನಮ್ಮ ಗಡಿ ಭಾಗದ ನೆಲವನ್ನು ಒತ್ತುವರಿ ಮಾಡಿಕೊಂಡಿದ್ದು, ಈವಿಷಯವನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದರೂ ಗಂಭೀರತೆ ಪ್ರದರ್ಶಿಸುತ್ತಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.