ಬೆಂಗಳೂರು: ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಮನೆಗಳಿಗಾಗಿ ಅರ್ಜಿ ಸಲ್ಲಿಸಿ ಮನೆಗಳನ್ನು ಪಡೆಯಲು ಸಾಧ್ಯವಾಗದ ಸುಮಾರು 2 ಲಕ್ಷ ಫಲಾನುಭವಿಗಳಿಗೆ ಹೊಸ ಯೋಜನೆಯಡಿ ಮನೆ ಕಟ್ಟಿಸಿಕೊಡಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ‘₹5 ಸಾವಿರ ಮೊತ್ತದಲ್ಲಿ ಒಂದು ಮನೆ ಕಟ್ಟಿಕೊಡುವ ವಸತಿ ಯೋಜನೆ ಇದ್ದಾಗಿನ ಕಾಲದಿಂದಲೂ ವಿವಿಧ ಕಾರಣಗಳಿಂದಾಗಿ ಫಲಾನುಭವಿಗಳು ಮನೆಗಳನ್ನು ಪಡೆಯಲು ಸಾಧ್ಯವಾಗಿಲ್ಲ. ಅತ್ಯಂತ ಕಡಿಮೆ ಮೊತ್ತದ ವಸತಿ ಯೋಜನೆಗಳಡಿ ಮನೆ ಕಟ್ಟಿಸುವುದಕ್ಕೂ ಸಾಧ್ಯವಿರಲಿಲ್ಲ. ಹೀಗಾಗಿ ಫಲಾನುಭವಿಗಳು ಮನೆಗಳನ್ನು ಕಟ್ಟಿಸಿಕೊಂಡಿರಲಿಲ್ಲ. ಕೆಲವು ಯೋಜನೆಗಳಡಿ ಮನೆಗಳು ಅಪೂರ್ಣವಾಗಿವೆ, ಇನ್ನು ಕೆಲವು ಯೋಜನೆಗಳಲ್ಲಿ ಮನೆಗಳ ನಿರ್ಮಾಣವೇ ಆರಂಭವಾಗಿಲ್ಲ. ಆದ್ದರಿಂದ ಇವೆಲ್ಲವನ್ನೂ ರದ್ದು ಮಾಡಿ ಹೊಸದಾಗಿ ಅರ್ಜಿ ಕರೆಯಲಾಗುವುದು. ಈ ರೀತಿ ಸುಮಾರು 2 ಲಕ್ಷ ಫಲಾನುಭವಿಗಳಿಗೆ ಮನೆ ಕಟ್ಟಿಸಿ ಕೊಡಲಾಗು ವುದು’ ಎಂದರು.
ಠೇವಣಿದಾರರ ಹಿತಾಸಕ್ತಿ ಕಾಯ್ದೆ: ಹಣಕಾಸು ವಿಷಯಗಳಿಗೆ ಸಂಬಂಧಿಸಿದಂತೆ ಠೇವಣಿದಾರರ ಎಲ್ಲ ಪ್ರಕರಣಗಳನ್ನು ಒಂದುಗೂಡಿಸಿ ವಿಚಾರಣೆ ನಡೆಸಲು ಅನುಕೂಲವಾಗುವಂತೆ ಠೇವಣಿದಾರರ ಹಿತಾಸಕ್ತಿ ಕಾಯ್ದೆಗೆ ತಿದ್ದುಪಡಿ ತರಲು ಒಪ್ಪಿಗೆ ನೀಡಲಾಯಿತು ಎಂದು ಅವರು ತಿಳಿಸಿದರು.
ಕೆಲವು ಪ್ರಕರಣಗಳಲ್ಲಿ 5 ರಿಂದ 10 ದೂರುಗಳು ದಾಖಲಾಗಿರುತ್ತವೆ. ಇವೆಲ್ಲದರ ವಿಚಾರಣೆ ಪ್ರತ್ಯೇಕವಾಗಿ ನಡೆಸುವುದಕ್ಕಿಂತ ಒಂದೇ ಪ್ರಕರಣವಾಗಿ ವಿಚಾರಣೆ ನಡೆಸಲು ಕಾಯ್ದೆಗೆ ತಿದ್ದುಪಡಿಯ ಅಗತ್ಯವಿತ್ತು ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.