ADVERTISEMENT

ತೆರಿಗೆ ಇಳಿಕೆಯಿಂದ ಗ್ರಾಮೀಣ ಜನರ ಆರ್ಥಿಕ ಪರಿಸ್ಥಿತಿ ಸುಧಾರಣೆ: ಸಚಿವ ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2022, 14:13 IST
Last Updated 1 ಫೆಬ್ರುವರಿ 2022, 14:13 IST
ಎಸ್.ಟಿ. ಸೋಮಶೇಖರ್‌
ಎಸ್.ಟಿ. ಸೋಮಶೇಖರ್‌   

ಬೆಂಗಳೂರು: ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ಸಹಕಾರ ಸಂಘಗಳ ತೆರಿಗೆ ಇಳಿಸುವ ಪ್ರಸ್ತಾಪ ಮಾಡಿದ್ದು, ಇದರಿಂದಾಗಿ ಗ್ರಾಮೀಣ ಜನರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಬಜೆಟ್ ಕುರಿತಂತೆ ಪ್ರತಿಕ್ರಿಯಿಸಿರುವ ಅವರು,ಸಹಕಾರ ಸಂಘಗಳ ತೆರಿಗೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ಪ್ರಸ್ತುತ ಸಹಕಾರ ಸಂಘಗಳು ಪಾವತಿಸುತ್ತಿದ್ದ ಶೇ 18 ತೆರಿಗೆಯನ್ನು ಶೇ 15 ಕ್ಕೆ ಇಳಿಕೆ ಮಾಡಿದೆ. ಒಂದು ಕೋಟಿಗಿಂತ ಹೆಚ್ಚು ಮತ್ತು ₹10 ಕೋಟಿ ವರೆಗಿನ ಆದಾಯ ಹೊಂದಿರುವ ಸಹಕಾರ ಸಂಘಗಳ ಮೇಲಿನ ಸರ್ ಚಾರ್ಜ್ ಅನ್ನು ಶೇ 12 ನಿಂದ ಶೇ 7ಕ್ಕೆ ಇಳಿಕೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ‌ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ ಸಹಕಾರ ಸಂಘಗಳು ಮತ್ತು ಸಂಘದ ಸದಸ್ಯರುಗಳ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಲಿದೆ. ಬಹುಪಾಲು ಸದಸ್ಯರು ಗ್ರಾಮೀಣ ಭಾಗದವರಾದ್ದರಿಂದ ಅವರ ಆರ್ಥಿಕ ಪರಿಸ್ಥಿತಿ ಕೂಡ ಸುಧಾರಿಸಲಿದೆ ಎಂದಿದ್ದಾರೆ.

ದೇಶದ ಆರ್ಥಿಕ ವ್ಯವಸ್ಥೆ ಚೇತರಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವ, ಗ್ರಾಮೀಣ ಮೂಲ ಸೌಕರ್ಯಕ್ಕೆ ಒತ್ತು ನೀಡುವ ಜನಪರ ಬಜೆಟ್ ಇದಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಬಜೆಟ್ ಇದಾಗಿದೆ. ಜನಸಾಮಾನ್ಯರ ಜೀವನ ಮಟ್ಟ ಸುಧಾರಿಸುವಂತಹ ಬಜೆಟ್ ನಲ್ಲಿ ಉದ್ಯೋಗ ಸೃಷ್ಟಿ, ಬಂಡವಾಳ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಕೋವಿಡ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದೇಶದ ಅರ್ಥವ್ಯವಸ್ಥೆಯನ್ನು ಸರಿದಾರಿಗೆ ತರುವುದನ್ನು ಕೇಂದ್ರೀಕರಿಸಿರುವ ಬಜೆಟ್ ಇದಾಗಿದೆ. ಈ ಬಾರಿಯ ಬಜೆಟ್ ನಿಂದ ದೇಶದ ಆರ್ಥಿಕ ಪ್ರಗತಿ ಸಾಧಿಸಲಿದೆ. ಕಸ್ಟಮ್ಸ್ ಸುಂಕ ಕಡಿತದಿಂದ ಚಿನ್ನಾಭರಣಗಳ ಬೆಲೆ ಇಳಿಕೆಯಾಗಲಿದೆ. ಕೃಷಿಗೆ ಆರ್ಥಿಕ ನೆರವು ನೀಡುವುದು, ನದಿ ಜೋಡಣೆಯಂತಹ ಹತ್ತಾರು ಯೋಜನೆಗಳನ್ನು ಘೋಷಿಸುವ ಮೂಲಕ ಜನಪರ ಬಜೆಟ್ ಅನ್ನು ಮಂಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.