ಬೆಂಗಳೂರು: ‘ಅಂತಿಮ ವರ್ಷದ (ಸೆಮಿಸ್ಟರ್) ಪದವಿ ಪರೀಕ್ಷೆಗಳ ಜೊತೆಗೆ ಬ್ಯಾಕ್ಲಾಗ್ ವಿಷಯಗಳ ಪರೀಕ್ಷೆಗಳನ್ನೂ ನಡೆಸುವಂತೆ ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೋವಿಡ್ ಕಾರಣದಿಂದಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಈ ಮಧ್ಯೆ, ವಿದ್ಯಾರ್ಥಿಗಳು ಬಾಕಿ ಉಳಿಸಿಕೊಂಡಿರುವ, ಅನುತ್ತೀರ್ಣರಾಗಿರುವ (ಬ್ಯಾಕ್ಲಾಗ್) ಹಿಂದಿನ ಸೆಮಿಸ್ಟರ್ಗಳ ವಿಷಯಗಳ ಪರೀಕ್ಷೆ ನಡೆಸದಿರಲುಕೆಲವು ವಿಶ್ವವಿದ್ಯಾಲಯಗಳು ತೀರ್ಮಾನಿಸಿರುವ ಸಂಗತಿ ಗಮನಕ್ಕೆ ಬಂದಿದೆ. ಇದು ಅಕ್ಷಮ್ಯ ಅಪರಾಧ’ ಎಂದರು.
‘ಅಂತಿಮ ವರ್ಷದ ವಿದ್ಯಾರ್ಥಿಗಳು ಪದವಿ ಮುಗಿಸಿಕೊಂಡು ಹೊರ ಹೋಗಬೇಕು ಎನ್ನುವುದು ನಮ್ಮ ಉದ್ದೇಶ. ಇಂಥ ಸನ್ನಿವೇಶದಲ್ಲಿ ಕೇವಲ ಅಂತಿಮ ವರ್ಷ (ಸೆಮಿಸ್ಟರ್) ಪರೀಕ್ಷೆ ನಡೆಸಿದರೆ ಸಮಸ್ಯೆ ಬಗೆಹರಿಯುವುದಿಲ್ಲ’ ಎಂದರು.
ಮಾದರಿಯಾದ ಕೆಇಎ–ಡಿಸಿಎಂ
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿಯೂ ಸಿಇಟಿ ಯಶಸ್ವಿಯಾಗಿ ನಡೆಸಲು ಕಾರಣರಾದ ಅಧಿಕಾರಿಗಳು, ಸಿಬ್ಬಂದಿಗೆ ಅಶ್ವತ್ಥನಾರಾಯಣ ಕೃತಜ್ಞತೆ ಸಲ್ಲಿಸಿದರು.
‘ನಮ್ಮದೇ ನಿಯಮಗಳನ್ನು ಮುಂದಿಟ್ಟುಕೊಂಡು ಅರುಣಾಚಲ ಪ್ರದೇಶದಲ್ಲಿ ಲೋಕಸೇವಾ ಆಯೋಗದ ಪರೀಕ್ಷೆ ನಡೆಸಲಾಗುತ್ತಿದೆ. ಕೆಪಿಎಸ್ಸಿ ಕೂಡ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಹೀಗೆ ಅನೇಕರಿಗೆ ಮಾದರಿಯಾದ ಕೆಲಸವನ್ನು ಕ್ಲಿಷ್ಟ ಸನ್ನಿವೇಶದಲ್ಲಿಯೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಾಡಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.