ADVERTISEMENT

ನಗರ ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಲು ಹೈಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 20:36 IST
Last Updated 23 ಏಪ್ರಿಲ್ 2021, 20:36 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: 10 ನಗರ ಸ್ಥಳೀಯ ಸಂಸ್ಥೆಗಳಿಗೆಏ.27ರಂದು ನಡೆಯಲಿರುವ ಚುನಾವಣೆಯನ್ನುಕೋವಿಡ್ ಉಲ್ಬಣವಾಗಿರುವ ಕಾರಣ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬಳ್ಳಾರಿ, ವಿಜಯಪುರ, ‌ರಾಮನಗರ, ಚನ್ನಪಟ್ಟಣ, ಗುಡಿಬಂಡೆ, ಭದ್ರಾವತಿ, ತೀರ್ಥಹಳ್ಳಿ, ಬೇಲೂರು, ಮಡಿಕೇರಿ ಮತ್ತು ಬೀದರ್‌ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಿಗದಿಯಾಗಿದೆ. ಕೋವಿಡ್ ಪ್ರಕರಣ ಹೆಚ್ಚಾಗಿರುವ ಸಂದರ್ಭದಲ್ಲಿ ಚುನಾವಣೆ ನಡೆಸಿದರೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದರು.

ಅವಧಿ ಮುಗಿದಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಂಬಂಧ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಪೃಥ್ವಿ ಚಿಂತಪಲ್ಲಿ ಅವರು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ADVERTISEMENT

‘ಚುನಾವಣೆ ನಡೆಸಲು ಮಾ.29ರಂದು ಅಧಿಸೂಚನೆ ಹೊರಡಿಸಲಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ’ ಎಂದು ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ ತಿಳಿಸಿದರು.

‘ಮತದಾನದ ವೇಳೆ ಕೋವಿಡ್ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಆಯೋಗ ತೆಗೆದುಕೊಳ್ಳಬೇಕು’ ಎಂದು ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.