ಹೊಸಪೇಟೆ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಬ್ಬಂದಿಗೆ ಐದು ದಿನ ರಜೆ ಘೋಷಿಸಿ ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ ಸೋಮವಾರ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ‘ವಿಶ್ವವಿದ್ಯಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುತ್ತಿದೆ. ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿ, ಸೋಂಕು ಹರಡದಂತೆ ತಡೆಯುವುದಕ್ಕಾಗಿ ಸೋಮವಾರದಿಂದ (ಆ.3) ಜಾರಿಗೆ ಬರುವಂತೆ ಆ. 7ರ ವರೆಗೆ ರಜೆ ಘೋಷಿಸಲಾಗಿದೆ’ ಎಂದು ತಿಳಿಸಿದ್ದಾರೆ.
‘ಎಲ್ಲ ಅಧ್ಯಯನಾಂಗಗಳ ಮುಖ್ಯಸ್ಥರು, ನಿರ್ದೇಶಕರು, ಸಂಯೋಜನಾಧಿಕಾರಿಗಳು, ನಿಲಯ ಪಾಲಕರು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಲು ದೂರವಾಣಿ, ಇಮೇಲ್ ವಿಳಾಸ ಕೊಟ್ಟು ಹೋಗಬೇಕು. ಯಾರೊಬ್ಬರೂ ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು. ತುರ್ತಾಗಿ ಕರೆದರೆ ಹಾಜರಾಗಬೇಕು. ಅಗತ್ಯವಿದ್ದಲ್ಲಿ ಮನೆಯಿಂದಲೇ ಕೆಲಸ ನಿರ್ವಹಿಸಲು ಸಿದ್ಧರಿರಬೇಕು. ಕರ್ತವ್ಯ ನಿರತ ರಜೆಯೆಂದು ಪರಿಗಣಿಸಲಾಗುವುದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.