ADVERTISEMENT

ಕೇಂದ್ರದಿಂದ ಸಂವಿಧಾನದ ಮೌಲ್ಯಗಳು ಮೂಲೆಗುಂಪು: ಮಲ್ಲಿಕಾರ್ಜುನ ಖರ್ಗೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 15:13 IST
Last Updated 26 ಜನವರಿ 2025, 15:13 IST
<div class="paragraphs"><p>ಕಾಂಗ್ರೆಸ್‌ ನಾಯಕ ಮಹಾರಾಷ್ಟ್ರ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ -ಪ್ರಜಾವಾಣಿ ಚಿತ್ರ</p></div>

ಕಾಂಗ್ರೆಸ್‌ ನಾಯಕ ಮಹಾರಾಷ್ಟ್ರ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ -ಪ್ರಜಾವಾಣಿ ಚಿತ್ರ

   

ಬೆಂಗಳೂರು: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನದ ಎಲ್ಲ ಮೌಲ್ಯಗಳನ್ನು ಮೂಲೆಗುಂಪು ಮಾಡುತ್ತಿದೆ. ಆ ಮೂಲಕ, ನಾಗರಿಕರಿಗೆ ಸಿಗಬೇಕಾದ ಮೂಲಭೂತ ಹಕ್ಕುಗಳು, ಅದರಲ್ಲೂ ಮಹಿಳೆಯರಿಗೆ ವಿಶೇಷವಾಗಿ ಸಿಗುವ ಸ್ವಾತಂತ್ರ್ಯ ಮೊಟಕುಗೊಳಿಸಲಾಗುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಖರ್ಗೆ, ‘ಅಂಬೇಡ್ಕರ್ ಜನ್ಮಸ್ಥಳದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಸೋಮವಾರ (ಜ. 27) ದೊಡ್ಡ ಸಭೆ ನಡೆಸುತ್ತಿದ್ದು, ಅದರಲ್ಲಿ ನಾನು ಭಾಗವಹಿಸುತ್ತಿದ್ದೇನೆ. ದೇಶಕ್ಕೆ ಮೋದಿ ಮತ್ತು ಅಮಿತ್ ಶಾ ಮಾಡುತ್ತಿರುವ ತೊಂದರೆ, ದೇಶದ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದರ ವಿರುದ್ಧ ಧ್ವನಿ ಎತ್ತಲಾಗುವುದು’ ಎಂದರು.

ADVERTISEMENT

'ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ ದುಃಖದ ವಿಚಾರವೆಂದರೆ ಅಮಿತ್ ಶಾ ಅವರಂಥ ನಾಯಕರು ಸಂವಿಧಾನವನ್ನು ಅವಮಾನಿಸುತ್ತಿದ್ದಾರೆ. ಸಂವಿಧಾನ ರಚಿಸಿದವರ ಬಗ್ಗೆ ಟೀಕೆ ಮಾಡಿ, ಅಗೌರವ ತೋರುತ್ತಿದ್ದಾರೆ’ ಎಂದರು.

‘ಕೇಂದ್ರ ಸರ್ಕಾರ ದೇಶದ ಪ್ರಜೆಗಳನ್ನು ಬಹಳ ಹೀನಾಯವಾಗಿ ನೋಡುತ್ತಿದೆ. ಅತಿ ಶ್ರೀಮಂತರು ಹಾಗೂ ಪ್ರಭಾವಿ ವ್ಯಕ್ತಿಗಳಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ನೀಡುತ್ತಿದೆ. ಬಡವರನ್ನು ಕಡೆಗಣಿಸುತ್ತಿದೆ. ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರು ದೇಶಕ್ಕೆ ಮಾಡಿರುವುದನ್ನು ಮೋದಿ ಅವರಾಗಲಿ, ಅವರ ಜತೆಗಿರುವವರಾಗಲಿ ಮಾಡುತ್ತಿಲ್ಲ’ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹಮದ್‌ ಇದ್ದರು.

ಆ ಕ್ಷಣಕ್ಕೆ ಕಾಯುತ್ತಿದ್ದೇವೆ– ಡಿಕೆಶಿ

‘ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ₹5300 ಕೋಟಿ ವಿಷಯದಲ್ಲಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಮೋಸ ಮಾಡುವುದಿಲ್ಲವೆಂಬ ನಂಬಿಕೆಯಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ‘ಮೇಕೆದಾಟು ಯೋಜನೆಗೆ ಮೋದಿ ಅವರ ಕೈಯಿಂದ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ದೇವೇಗೌಡರು ಮತ್ತು ಕುಮಾರಸ್ವಾಮಿ ಹೇಳಿದ್ದರು. ಆ ಕ್ಷಣಕ್ಕೆ ಕಾಯುತ್ತಿದ್ದೇವೆ’ ಎಂದರು.‌ ‘ಕಳಸಾ ಬಂಡೂರಿ ಯೋಜನೆಗೆ ಪ್ರಲ್ಹಾದ ಜೋಷಿ ಹಾಗೂ ಜಗದೀಶ ಶೆಟ್ಟರ್ ಅರಣ್ಯ ಇಲಾಖೆಯಿಂದ ಅನುಮತಿ ಕೊಡಿಸುತ್ತಾರೆಂದು ಕಾಯುತ್ತಿದ್ದೇನೆ. ಈ ವಿಚಾರವಾಗಿ ನಾವು ಮನವಿ ಮಾಡಿದ್ದೇವೆ. ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ. ಸಂಸತ್ ಕಲಾಪದ ವೇಳೆಯಲ್ಲಿಯೂ ಭೇಟಿ ಮಾಡುತ್ತೇನೆ. ಫಲಾಫಲ ಭಗವಂತನಿಗೆ ಬಿಟ್ಟದ್ದು’ ಎಂದರು. ‘ಎಐಸಿಸಿ ಅಧ್ಯಕ್ಷರ ಜೊತೆ ಚರ್ಚೆಯ ವೇಳೆ ಯಾವ ಸೂಚನೆ ನೀಡಿದರು’ ಎಂಬ ಪ್ರಶ್ನೆಗೆ ‘ಕೆಪಿಸಿಸಿ ಕಚೇರಿ ಕಟ್ಟಿದ್ದು ಅವರೇ. ಅವರು ಇಲ್ಲಿ ಎರಡು ನಿಮಿಷ ನೆಮ್ಮದಿಯಾಗಿ ಕಾಫಿ ಕುಡಿಯಬಾರದೇ? ನೀವು (ಮಾಧ್ಯಮ) ನಿಮ್ಮ ಮನೆಯವರು ಚರ್ಚೆ ಮಾಡುವಾಗ ಸಾರ್ವಜನಿಕವಾಗಿ ಮಾತನಾಡುತ್ತೀರಾ’ ಎಂದು ಹಾಸ್ಯ ಚಟಾಕಿ ಹಾರಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ‘ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ವಾಣಿ ವಿಲಾಸ ಸಾಗರ ಆಣೆಕಟ್ಟು ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.