ADVERTISEMENT

ಬೆಳಗಾವಿ–ಬೆಂಗಳೂರು ಸೇರಿ 3 ಹೊಸ ವಂದೇ ಭಾರತ್ ರೈಲು ಪ್ರಾರಂಭಕ್ಕೆ ಮುಹೂರ್ತ ಫಿಕ್ಸ್

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 10:11 IST
Last Updated 5 ಆಗಸ್ಟ್ 2025, 10:11 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

–ಪಿಟಿಐ ಚಿತ್ರ

ನವದೆಹಲಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು ಸಂಚಾರ ಸೇರಿದಂತೆ ಮೂರು ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಆ.10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು–ಬೆಳಗಾವಿ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಮೂರು ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀಮಾತಾ ವೈಷ್ಣೋದೇವಿ–ಕಾತ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.

ಸಚಿವ ಜೋಶಿ ಕೋರಿಕೆಗೆ ಸ್ಪಂದನೆ: ಈ ಹಿಂದೆ ಸಚಿವ ಪ್ರಲ್ಹಾದ ಜೋಶಿ ಅವರು ಬೆಂಗಳೂರು-ಬೆಳಗಾವಿ ಮಧ್ಯೆ ನೂತನ ವಂದೇ ಭಾರತ್‌ ರೈಲು ಸಂಚಾರ ಆರಂಭಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ಭಾನುವಾರ ತಾವೇ ಖುದ್ದು ಈ ಹೊಸ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ರೈಲು ಸಂಚಾರದ ವೇಳೆ: ಈ ನೂತನ ವಂದೇ ಭಾರತ್‌ ರೈಲು ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50ಕ್ಕೆ ತಲುಪಲಿದೆ. ವಾಪಸ್‌ ಬೆಂಗಳೂರಿನಿಂದ ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ.

ಈ ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ರೈಲ್ವೆ ಸೌಲಭ್ಯ ಕಲ್ಪಿಸುವಲ್ಲಿ ಶ್ರಮಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.