ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಕ್ಕೆ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ. ಹಲವು ಮಠಾಧೀಶರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
‘ಇಡೀ ಸಮುದಾಯ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೆನ್ನಿಗೆ ನಿಲ್ಲಲಿದೆ. ಮಠಾಧೀಶರೊಂದಿಗೆ ಶೀಘ್ರವೇ ಪೂರ್ವಭಾವಿ ಸಭೆಯೊಂದನ್ನು ನಡೆಸಲಾಗುವುದು. ಬಿ.ವೈ.ವಿಜಯೇಂದ್ರ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡುವುದು ನಮ್ಮ ಉದ್ದೇಶ’ ಎಂದು ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
‘ಕೆಲವು ತಿರಸ್ಕೃತ ನಾಣ್ಯಗಳು ವೀರಶೈವ–ಲಿಂಗಾಯರ ನಾಯಕರೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ನೀವು (ಬಸನಗೌಡ ಪಾಟೀಲ ಯತ್ನಾಳ್) ಲಿಂಗಾಯತ ನಾಯಕರಲ್ಲ, ಡಮ್ಮಿ ನಾಯಕರು’ ಎಂದು ಆರೋಪಿಸಿದರು.
‘ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ದಾವಣಗೆರೆಯಲ್ಲಿ ಸಮಾವೇಶವೊಂದನ್ನು ಸಂಘಟಿಸುವ ಆಲೋಚನೆ ಇತ್ತು. ಇಂತಹ ಸಮಾವೇಶ ಸಂಘಟಿಸದಂತೆ ಸ್ವತಃ ಯಡಿಯೂರಪ್ಪ ಅವರೇ ಸೂಚನೆ ನೀಡಿದ್ದರಿಂದ ನಿರ್ಧಾರ ಕೈಬಿಟ್ಟೆವು. ಪಕ್ಷದ ವರಿಷ್ಠರು ಈ ಸಮಾವೇಶವನ್ನು ತಡೆದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.