ADVERTISEMENT

ವಿಭೂತಿ, ಇಷ್ಟಲಿಂಗ ತಯಾರಿಕೆಗೆ ನೆರವು: ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 2:42 IST
Last Updated 15 ಜುಲೈ 2021, 2:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಿಭೂತಿ ಮತ್ತು ಇಷ್ಟಲಿಂಗ ತಯಾರಿಕಾ ಘಟಕಗಳನ್ನು ಸ್ಥಾಪಿಸುವವರಿಗೆ ಸಾಲ ಹಾಗೂ ಸಹಾಯಧನ ನೀಡುವ ಯೋಜನೆಗಳಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಒಪ್ಪಿಗೆ ನೀಡಿದೆ.

ಮಂಡಳಿಯ ಅಧ್ಯಕ್ಷ ಬಿ.ಎಸ್‌. ಪರಮಶಿವಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ. ಕೃಷಿ, ಶೈಕ್ಷಣಿಕ, ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವೀರಶೈವ ಲಿಂಗಾಯತ ಸಮುದಾಯದ ಜನರಿಗೆ ನೆರವು ನೀಡುವ ಹಲವು ಕಾರ್ಯಕ್ರಮಗಳಿಗೂ ಮಂಡಳಿ ಒಪ್ಪಿಗೆ ನೀಡಿದೆ.

ಇತರ ನಿಗಮಗಳಲ್ಲಿರುವ ‘ಗಂಗಾ ಕಲ್ಯಾಣ ಯೋಜನೆ’ ಮಾದರಿಯಲ್ಲಿ ‘ಜೀವಜಲ ಯೋಜನೆ’, ಶೈಕ್ಷಣಿಕ ಸಾಲ, ಉನ್ನತ ಶಿಕ್ಷಣ ಪಡೆಯಲು ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ₹ 20 ಲಕ್ಷದವರೆಗೆ ಸಾಲ, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ, ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಕೃಷಿ ಮತ್ತು ಹೈನುಗಾರಿಕೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಂಡಳಿಯ ಮೂಲಗಳು ತಿಳಿಸಿವೆ.

ADVERTISEMENT

ಪ್ರಸಕ್ತ ವರ್ಷ ₹ 220 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಕ್ರಿಯಾಯೋಜನೆ ರೂಪಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಮೊದಲ ಹಂತದಲ್ಲಿ ಮಂಡಳಿಯ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇನ್ನಷ್ಟು ಹೊಸ ಯೋಜನೆಗಳಿಗೆ ಮುಂದಿನ ಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದು ಮಂಡಳಿಯ ನಿರ್ದೇಶಕರು ತಿಳಿಸಿದ್ದಾರೆ.

ಮಂಡಳಿಯ ನಿರ್ದೇಶಕರಾದ ವೀರಣ್ಣ ಚರಂತಿಮಠ, ಅರವಿಂದ ಬೆಲ್ಲದ, ಲಿಂಗಮೂರ್ತಿ ಹೊಸದುರ್ಗ, ಮಹಾಂತೇಶ್ ಎಂ. ಪಾಟೀಲ್‌, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಆಯುಕ್ತ ವಸಂತ್‌ ಕುಮಾರ್, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಕುಮಾರ್, ಕಂಪನಿ ಕಾರ್ಯದರ್ಶಿ ಧಿರೇನ್ ಕುಮಾರ್, ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ಡಿ.ಎಸ್‌. ಸುದರ್ಶನ್‌ ಕುಮಾರ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.