ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನು ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.
ನಗರದಲ್ಲಿ ಭಾನುವಾರ ನಡೆದ ಮಹಾಸಭಾದ ‘ಪ್ರಾತಿನಿಧಿಕ ಸಭೆ’ಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ’ಸರ್ವರಿಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದವರು ಬಸವಾದಿ ಶರಣರು. ಆದರೆ, ಬಸವತತ್ವ ಅನುಯಾಯಿಗಳಾದ ಲಿಂಗಾಯಿತ ವೀರಶೈವರೇ ಸಾಮಾಜಿಕ ನ್ಯಾಯದಿಂದ ವಂಚಿತರಾಗಿದ್ದಾರೆ. ಹೀಗಾಗಿ, ಸಂವಿಧಾನಬದ್ಧವಾಗಿ ನಮ್ಮ ಬೇಡಿಕೆ ಈಡೇರಿಸಬೇಕು. ಸರ್ಕಾರ ಸಮುದಾಯದ ಬೇಡಿಕೆಗೆ ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು.
‘ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸಮುದಾಯದ ಜನರಿದ್ದಾರೆ. ಕರ್ನಾಟಕದಲ್ಲಿ ಸುಮಾರು ಶೇ 18ರಿಂದ 20ರಷ್ಟು ಜನರಿದ್ದಾರೆ. ಈ ಸಮುದಾಯ ಮುಂದುವರಿದಿದೆ ಎಂದು ಕೆಲವರು ವಾದಿಸುತ್ತಾರೆ. ಆದರೆ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿಯೂ ಅತ್ಯಂತ ಹಿಂದುಳಿದಿರುವ ಸಮುದಾಯದಲ್ಲಿ ಲಿಂಗಾಯತ ವೀರಶೈವ ಸಮುದಾಯವೂ ಸೇರುತ್ತದೆ’ ಎಂದು ಅವರು ಪ್ರತಿಪಾದಿಸಿದರು.
‘ಕೇಂದ್ರದ ಒಬಿಸಿ ಪಟ್ಟಿಯಲ್ಲಿ ವೀರಶೈವ–ಲಿಂಗಾಯತ ಎಲ್ಲ ಉಪ ಪಂಗಡಗಳು ಇಲ್ಲದೇ ಇರುವುದರಿಂದ ಕೇಂದ್ರ ಲೋಕಸೇವಾ ಆಯೋಗ, ಬ್ಯಾಂಕಿಂಗ್, ರೈಲ್ವೆ ನೇಮಕಾತಿ ಮಂಡಳಿ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಮತ್ತು ಕೇಂದ್ರ ಸರ್ಕಾರದ ಉದ್ದಿಮೆಗಳ ನೇಮಕಾತಿಯಲ್ಲಿ ಸಮುದಾಯದಿಂದ ಆಯ್ಕೆಯಾಗಿ ನೇಮಕಗೊಂಡಿರುವವರ ಪಾಲು ನಗಣ್ಯ. ಜತೆಗೆ, ಐಐಟಿ, ಐಐಎಸ್ಸಿ ಸಂಸ್ಥೆಗಳು ಸೇರಿದಂತೆ ರಾಷ್ಟ್ರೀಯ ಪ್ರಾಮುಖ್ಯತೆಯ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವುದರಿಂದ ವಂಚಿತರಾಗಿದ್ದಾರೆ’ ಎಂದು ವಿವರಿಸಿದರು.
‘ವೀರಶೈವ ಲಿಂಗಾಯತರಲ್ಲಿ ಸುಮಾರು 90 ಉಪ ಪಂಗಡಗಳಿವೆ. ಆದರೆ, ಕೇವಲ 14 ಉಪ ಪಂಗಡಗಳನ್ನು ಮಾತ್ರ ಕೇಂದ್ರದ ಒಬಿಸಿ ಪಟ್ಟಿಗೆಸೇರಿಸಲಾಗಿದೆ. ಯಾವುದೇ ಸಮುದಾಯಕ್ಕೂ ಅನ್ಯಾಯವಾಬಾರದು ಎನ್ನುವುದು ಮಹಾಸಭಾದ ನಿಲುವು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.