ಮೈಸೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘವು ಭಾನುವಾರ ಇಲ್ಲಿ ಹಮ್ಮಿಕೊಂಡಿದ್ದ 10ನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಸಮುದಾಯದ ಸರ್ಕಾರಿ ನೌಕರರಹಿತ ಕಾಯುವಂತೆ ಹಕ್ಕೊತ್ತಾಯ ಮಂಡಿಸಿತು.
ಸಂಘದ ಪದಾಧಿಕಾರಿಗಳು ಹಕ್ಕೊತ್ತಾಯಗಳನ್ನು ವಿರೋಧ ಪಕ್ಷದ ನಾಯಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿದರು.
ನೂತನಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸುವುದು. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವುದು. ಕೇಂದ್ರ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ವೀರಶೈವ ಲಿಂಗಾಯತರಿಗೆ ‘ಒಬಿಸಿ’ ಮೀಸಲಾತಿ ಸೌಲಭ್ಯ ಕಲ್ಪಿಸುವುದು. ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನಾಗರಿಕ ನಿವೇಶನಕ್ಕಾಗಿ ಅನುದಾನ ನೀಡುವುದು. ಲಿಂಗೈಕ್ಯರಾದ ಸಿದ್ಧಗಂಗಾ ಶ್ರೀಗಳಿಗೆ ‘ಭಾರತ ರತ್ನ’ ಪುರಸ್ಕಾರ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವುದು. ರಾಜ್ಯದ ಅನುದಾನಿತ ಸಂಸ್ಥೆಗಳಲ್ಲಿ 10– 15 ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು. 1995ರ ನಂತರ ಸ್ಥಾಪನೆಗೊಂಡ ಶಿಕ್ಷಣ ಸಂಸ್ಥೆಗಳಿಗೆ ಸಹಾಯಾನುದಾನ ನೀಡುವಂತೆ ಮನವಿ ಒಪ್ಪಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಯಡಿಯೂರಪ್ಪ, ‘ವಿರೋಧ ಪಕ್ಷದ ನಾಯಕನಾಗಿ ಸೂಕ್ತ ಸಂದರ್ಭದಲ್ಲಿ ಈ ಮನವಿಗಳನ್ನು ಸದನದ ಮುಂದೆ ಮಂಡಿಸುತ್ತೇನೆ. ನಿಮ್ಮ ಹಿತ ಕಾಯುವುದು ನನ್ನ ಕರ್ತವ್ಯ’ ಎಂದು ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.