ADVERTISEMENT

ಜಾತಿ ಗಣತಿ ವರದಿಗೆ ವೀರಶೈವ ಮಹಾಸಭಾ ವಿರೋಧ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 16:59 IST
Last Updated 6 ಸೆಪ್ಟೆಂಬರ್ 2021, 16:59 IST

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವೈಜ್ಞಾನಿಕವಾಗಿಲ್ಲ ಎಂದು ಆಕ್ಷೇಪಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾ, ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದೆ.

‘ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆದಿಲ್ಲ. ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಗುಳೆ ಹೋದವರನ್ನು ಸಮೀಕ್ಷೆಯಲ್ಲಿ ಪರಿಗಣಿಸಿಲ್ಲ. ವೀರಶೈವ– ಲಿಂಗಾಯತರಲ್ಲೂ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಈಗ ಮಾಡಿರುವ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡರೆ ಸಮುದಾಯದ ಲಕ್ಷಾಂತರ ಮಂದಿಗೆ ಅನ್ಯಾಯವಾಗುತ್ತದೆ’ ಎಂದು ಮಹಾಸಭಾದ ಉಪಾಧ್ಯಕ್ಷ ಬಿ.ಎಸ್‌. ಸಚ್ಚಿದಾನಂದಮೂರ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳನ್ನು ಗುರುತಿಸುವ ಗಣತಿಗೆ ಮಹಾಸಭಾದ ವಿರೋಧವಿಲ್ಲ. ಈ ಸಮೀಕ್ಷೆಯ ಅಂಕಿಅಂಶಗಳನ್ನು ವ್ಯವಸ್ಥಿತವಾಗಿ ಸೋರಿಕೆ ಮಾಡಲಾಗಿದೆ. ಕೇವಲ ಜಾತಿವಾರು ಜನಸಂಖ್ಯೆಯನ್ನು ಸೋರಿಕೆ ಮಾಡಿ ಗೊಂದಲ ಮೂಡಿಸಲಾಗಿದೆ. ಗಣತಿದಾರರು ವೀರಶೈವ– ಲಿಂಗಾಯತ ಸಮುದಾಯದ ಶೇಕಡ 50ರಷ್ಟು ಮನೆಗಳಿಗೆ ಭೇಟಿನೀಡಿಲ್ಲ. ವರದಿಯ ಹಲವು ಲೋಪಗಳಿಂದ ಕೂಡಿದೆ ಎಂಬ ಅನುಮಾನವಿದೆ ಎಂದು ಹೇಳಿದ್ದಾರೆ.

ADVERTISEMENT

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಸಲ್ಲಿಸಿರುವ ವರದಿಯನ್ನು ತಿರಸ್ಕರಿಸಬೇಕು. ರಾಷ್ಟ್ರೀಯ ಮಟ್ಟದಲ್ಲೂ ಜಾತಿ ಗಣತಿ ನಡೆಸುವ ಚರ್ಚೆ ನಡೆಯುತ್ತಿದೆ. ಅಲ್ಲಿನ ಬೆಳವಣಿಗೆಯನ್ನು ನೋಡಿಕೊಂಡು ರಾಜ್ಯ ಸರ್ಕಾರ ಮುನ್ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.