ADVERTISEMENT

ವೀರಶೈವರನ್ನು ಒಬಿಸಿ ಪಟ್ಟಿಗೆ ಸೇರಿಸಲು ಆಗ್ರಹ: ಆ.1ರಂದು ಸಭೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 19:53 IST
Last Updated 30 ಜುಲೈ 2022, 19:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವೀರಶೈವ ಸಮಾಜದ ಎಲ್ಲ ಪಂಗಡಗಳನ್ನೂ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಗಸ್ಟ್ 1ರಂದು ಸಭೆ ನಡೆಸಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಎನ್. ತಿಪ್ಪಣ್ಣ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವೀರಶೈವ- ಲಿಂಗಾಯತ ಸಮುದಾಯವು 60 ವರ್ಷಗಳಿಂದಲೂ ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿವೆ. ಆದರೆ, ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆ ಈಡೇರಿಲ್ಲ. ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆ.1ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಸಭೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು. ವೀರಶೈವ– ಲಿಂಗಾಯತ ಸಮಾಜವನ್ನು ಕೇಂದ್ರದ ಒಬಿಸಿ ಪಟ್ಟಿಯಿಂದ ಹೊರಗಿಟ್ಟಿರುವುದಕ್ಕೆ ಯಾವುದೇ ಕಾರಣಗಳಿಲ್ಲ. ರಾಜ್ಯ ಸರ್ಕಾರ ತಮ್ಮ ಬೇಡಿಕೆಗೆ ಪೂರಕವಾಗಿ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದರು. ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರದೇ ಇರುವುದರಿಂದ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳು ಮತ್ತು ಅಖಿಲ ಭಾರತ ಸೇವೆಗಳಲ್ಲಿ ವೀರಶೈವ- ಲಿಂಗಾಯತ ಸಮಾಜಕ್ಕೆ ಅನ್ಯಾಯವಾಗುತ್ತಿದೆ. ಇತರ ಸಮುದಾಯಗಳಿಗೆ ನೀಡಿದಂತೆ ವೀರಶೈವ- ಲಿಂಗಾಯತರಿಗೂ ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಮಾನ್ಯತೆ ನೀಡಬೇಕು ಎಂದರು. ಮಹಾ ಸಭೆಯ ಕಾರ್ಯದರ್ಶಿ ಎಚ್.ಎಂ. ರೇಣುಕ ಪ್ರಸನ್ನ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಸ್. ಗುರುಸ್ವಾಮಿ, ಪ್ರಧಾನ ಕಾರ್ಯದರ್ಶಿ ಜಿ.ಎಸ್. ಮೃತ್ಯುಂಜಯ ಸ್ವಾಮಿ, ಕಾರ್ಯದರ್ಶಿ ಡಿ.ಬಿ. ಬಾಲಚಂದ್ರ ಪತ್ರಿಕಾಗೋಷ್ಠಿ ಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT