ADVERTISEMENT

ಕೋವಿಡ್‌ ನಿಯಂತ್ರಣ ಪರಿಕರಗಳ ಖರೀದಿಯ ಪರಿಶೀಲನೆ ಅಗತ್ಯ– ರಾಮಲಿಂಗಾರೆಡ್ಡಿ

ನಿರ್ಬಂಧ ಆದೇಶ ಹಿಂಪಡೆಯಲು ಸಭಾಧ್ಯಕ್ಷರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 8 ಮೇ 2021, 10:43 IST
Last Updated 8 ಮೇ 2021, 10:43 IST
 ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ   

ಬೆಂಗಳೂರು: ‘ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್, ಆಮ್ಲಜನಕ ಸಿಲಿಂಡರ್‌ಗಳು, ಆಸ್ಪತ್ರೆಗಳಲ್ಲಿ ಹಾಸಿಗೆಗಳು ಮತ್ತಿತರ ಉಪಕರಣಗಳ ಖರೀದಿ ಕುರಿತಂತೆ ಲೆಕ್ಕಪರಿಶೀಲನೆ, ಸ್ಥಳ ಪರಿಶೀಲನೆ ನಡೆಸುವ ಅಗತ್ಯ ಇದ್ದು, ನಿರ್ಬಂಧ ಆದೇಶ ಹಿಂಪಡೆಯಬೇಕು’ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಅಧ್ಯಕ್ಷ ರಾಮಲಿಂಗಾ ರೆಡ್ಡಿ ಪತ್ರ ಬರೆದಿದ್ದಾರೆ.

‘ಕೊರೊನಾ ವೈರೆಸ್‌ನಿಂದ ಅತ್ಯಂತ ಗಂಭೀರ, ಕಳವಳಕಾರಿ ಹಾಗೂ ಆತಂಕದ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಹತ್ವದ ಹೊಣೆಗಾರಿಕೆ ಮತ್ತು ಜವಾಬ್ದಾರಿ ನಿರ್ವಹಿಸಬೇಕಾಗಿದೆ. ಪ್ರಸ್ತುತ ಕೊರೊನಾ ಎರಡನೇ ಅಲೆ ನಿರೀಕ್ಷೆಗೂ ಮೀರಿ ವ್ಯಾಪಿಸುತ್ತಿದ್ದು, ದಿನೇ ದಿನೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹಾಗೂ ಕೊರೊನಾ ಸೋಂಕಿತರ ಸಾವು ಹೆಚ್ಚಾಗುತ್ತಿದೆ. ಕೊರೊನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಪಾರದರ್ಶಕ, ಸಮಯೋಚಿತ ಜನಪರ ನಿರ್ಧಾರಗಳನ್ನು ಕಾಲಕಾಲಕ್ಕೆ ತೆಗೆದುಕೊಳ್ಳಬೇಕಾಗಿರುವುದು ಅವಶ್ಯಕತೆಯಾಗಿದೆ. ರಾಜ್ಯದ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಕೊರೊನಾ ಸೋಂಕಿತರ ಜೀವ ಉಳಿಸಲು ಅಗತ್ಯ ಔಷಧಗಳಲ್ಲಿ ಒಂದಾದ ರೆಮ್‌ಡಿಸಿವಿರ್‌ ಚುಚ್ಚುಮದ್ದಿನ ಕೊರತೆಯನ್ನು ಬಹುತೇಕ ಜಿಲ್ಲೆಗಳು ಎದುರಿಸುತ್ತಿವೆ. ರೆಮ್‌ಡಿಸಿವಿರ್ ಔಷಧಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಕಾಳಸಂತೆಯಲ್ಲೂ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಸರ್ಕಾರದ ವೈಫಲ್ಯ ಮತ್ತು ಅಧಿಕಾರಿಗಳ ಸಮನ್ವಯ ಕೊರತೆ ಕಾರಣದಿಂದ ಆಮ್ಲಜನಕ ಕೊರತೆ ಉಂಟಾಗಿ ಚಾಮರಾಜನಗರ, ಅಫ್ಜಲಪುರ ಮತ್ತು ಇತರ ಸ್ಥಳಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಜನರು ಮೃತಪಟ್ಟಿರುತ್ತಾರೆ. ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್ ಸಿಗದೆ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಮತ್ತೊಂದು ಕಡೆ ಖಾಸಗಿ ಆಸ್ಪತ್ರೆಗಳಲ್ಲಿನ ಬೆಡ್‌ಗಳನ್ನು ಬ್ಲಾಕ್ ಮಾಡಿ, ಅಕ್ರಮವಾಗಿ ಮಾರಾಟ ಮಾಡುತ್ತಿರುವ ದಂಧೆಯ ಆರೋಪ ಕೇಳಿಬರುತ್ತಿದೆ. ಬೆಂಗಳೂರು ನಗರದಲ್ಲಿ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವುದರಿಂದ ಲಘು ರೋಗ ಲಕ್ಷಣ ಇರುವ ಸೋಂಕಿತರ ಚಿಕಿತ್ಸೆಗೆ ಸಂಬಂಧಪಟ್ಟ ಇಲಾಖೆಗಳು ಕೋವಿಡ್ ಆರೈಕೆ ಕೇಂದ್ರಗಳನ್ನು ಜರೂರಾಗಿ ಸ್ಥಾಪಿಸುವ ಅಗತ್ಯ ಇದ್ದರೂ, ಸರ್ಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ’ ಎಂದು ಅವರು ದೂರಿದ್ದಾರೆ.

ADVERTISEMENT

‘ಇಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ಶಾಸನಸಭೆ, ಶಾಸನಸಭೆಯ ಸಮಿತಿಗಳು ತಮ್ಮ ಜವಾಬ್ದಾರಿಯುತ ಕರ್ತವ್ಯಗಳನ್ನು ನಿರ್ವಹಿಸುವುದು ಸಂವಿಧಾನಿಕ ಬಾಧ್ಯತೆ ಹಾಗೂ ನಿಯಮಗಳ ಅನ್ವಯ ಕಾರ್ಯನಿರ್ವಹಿಸುವ ಉತ್ತರದಾಯಿತ್ವ ಸಮಿತಿಗಳದ್ದಾಗಿದೆ. ಹೀಗಾಗಿ, ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಉಪಕರಣಗಳ ಖರೀದಿಗಳ ಕುತಂತೆ ಚರ್ಚಿಸಿ ಲೆಕ್ಕಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಿ ಸರ್ಕಾರಕ್ಕೆ ಶಿಫಾರಸು ನೀಡುವ ಅನಿವಾರ್ಯತೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗಿದೆ. ಆದರೆ, ತಮ್ಮ ನಿರ್ಬಂಧ ಆದೇಶದಿಂದ ಸಾಧ್ಯವಾಗುತ್ತಿಲ್ಲ’ ಎಂದೂ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.