ADVERTISEMENT

‘ಸತ್ತವರು ಉಗ್ರರು’: ಪರಿಷತ್ತಿನಲ್ಲಿ ಕೋಲಾಹಲ

ಗೋಲಿಬಾರ್–ಕಿಡಿ ಹಚ್ಚಿದ ರವಿಕುಮಾರ್ ಕ್ಷಮೆಯಾಚನೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 20:25 IST
Last Updated 18 ಫೆಬ್ರುವರಿ 2020, 20:25 IST
ವಿಧಾನ ಪರಿಷತ್‌ನಲ್ಲಿ ಮಂಗಳವಾರ ಬಿಜೆಪಿ ಸದಸ್ಯ ಎನ್‌.ರವಿಕುಮಾರ್ ಹೇಳಿಕೆ ಖಂಡಿಸಿ ವಿರೋಧ ಪಕ್ಷದ ಸದಸ್ಯರು ಸಭಾಪತಿ ಪೀಠದ ಎದುರು ಧರಣಿ ನಡೆಸಿದರು
ವಿಧಾನ ಪರಿಷತ್‌ನಲ್ಲಿ ಮಂಗಳವಾರ ಬಿಜೆಪಿ ಸದಸ್ಯ ಎನ್‌.ರವಿಕುಮಾರ್ ಹೇಳಿಕೆ ಖಂಡಿಸಿ ವಿರೋಧ ಪಕ್ಷದ ಸದಸ್ಯರು ಸಭಾಪತಿ ಪೀಠದ ಎದುರು ಧರಣಿ ನಡೆಸಿದರು   

ಬೆಂಗಳೂರು: ‘ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಡಿಸೆಂಬರ್‌ 19ರಂದು ನಡೆದ ಪ್ರತಿಭಟನೆ ವೇಳೆ ಗೋಲಿಬಾರ್‌ನಲ್ಲಿ ಮೃತಪಟ್ಟವರು ಭಯೋತ್ಪಾದಕರು, ಅವರ ಮನೆಗೆ ಸಚಿವರು ತೆರಳುವ ಅಗತ್ಯ ಇಲ್ಲ’ ಎಂಬ ಆಡಳಿತ ಪಕ್ಷದ
ಎನ್‌. ರವಿಕುಮಾರ್ ಅವರ ಮಾತು ವಿಧಾನ ಪರಿಷತ್‌ನಲ್ಲಿ ಮಂಗಳವಾರ ತೀವ್ರ ಕೋಲಾಹಲ ಸೃಷ್ಟಿಸಿತು.

ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ಅವರು ನಿಲುವಳಿ ಸೂಚನೆಯ ಮೇರೆಗೆ ವಿಷಯ ಪ್ರಸ್ತಾಪಿಸಿ, ಬಿಜೆಪಿ ಸರ್ಕಾರದ ತಾರತಮ್ಯ ನೀತಿಯನ್ನು ಖಂಡಿಸಿದರು.

‘ಮಂಗಳೂರಿಗೆ ಹೋಗಲು ನನಗೆ ಅವಕಾಶ ಕೊಡಲಿಲ್ಲ, ಸಂತ್ರಸ್ತರಿಗೆ ಪರಿಹಾರವನ್ನೂ ನೀಡಲಿಲ್ಲ’ ಎಂದು ಹೇಳುತ್ತಿದ್ದಾಗ, ಮಧ್ಯಪ್ರವೇಶಿಸಿದ ಕಾಂಗ್ರೆಸ್‌ನ ಐವನ್‌ ಡಿಸೋಜ ಅವರು ಜಿಲ್ಲಾ ಉಸ್ತುವಾರಿ ಸಚಿವರೇ ಸಂತ್ರಸ್ತರ ಮನೆಗೆ ಹೋಗಿಲ್ಲ ಎಂದು ಕುಟುಕಿದರು.

ADVERTISEMENT

‘ಭಯೋತ್ಪಾದಕರ ಮನೆಗೆ ಸಚಿವರು ಯಾಕೆ ಹೋಗಬೇಕು’ ಎಂದು ರವಿಕುಮಾರ್ ಪ್ರಶ್ನಿಸಿದರು. ಇದರಿಂದ ಕೆರಳಿದ ಕಾಂಗ್ರೆಸ್‌ನ ಸಿ.ಎಂ.ಇಬ್ರಾಹಿಂ ಅವರು ಸಭಾಪತಿ ಪೀಠದ ಎದುರು ಧರಣಿಗೆ ಮುಂದಾದರು. ಕಾಂಗ್ರೆಸ್ ಮತ್ತು ಜೆಡಿಎಸ್‌ ಸದಸ್ಯರು ಅವರನ್ನು ಹಿಂಬಾಲಿಸಿದರು. ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಸದನವನ್ನು ಅರ್ಧ ಗಂಟೆ ಮುಂದೂಡಿದರು.

ಮತ್ತೆ ಕಲಾಪ ಆರಂಭವಾದಾಗ ರವಿಕುಮಾರ್‌ ಕ್ಷಮೆಯಾಚಿಸಿದರು. ಕಾಂಗ್ರೆಸ್ ಸದಸ್ಯ ಐವನ್‌ ಡಿಸೋಜ ಅವರು ನಿಲುವಳಿ ಗೊತ್ತುವಳಿ ಮೇಲೆ ಚರ್ಚೆ ಮುಂದುವರಿಸಿದರು.ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಅವರು ಧರಣಿಗೆ ಮುಂದಾಗಿದ್ದರಿಂದ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.