ADVERTISEMENT

ರವಿಕುಮಾರ್ ಪ್ರಕರಣ ನೀತಿ ನಿರೂಪಣಾ ಸಮಿತಿಗೆ?

ವಿಧಾನ ಪರಿಷತ್‌ನಲ್ಲೇ ದೊರೆಸ್ವಾಮಿಗೆ ಧಿಕ್ಕಾರ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 18:29 IST
Last Updated 4 ಮಾರ್ಚ್ 2020, 18:29 IST
ಬಿಜೆಪಿ ಸದಸ್ಯ ರವಿಕುಮಾರ್ ಅವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್‌ನಲ್ಲಿ ಬುಧವಾರ ವಿರೋಧ ಪಕ್ಷದ ಸದಸ್ಯರು ಧರಣಿ ನಡೆಸಿದರು –ಪ್ರಜಾವಾಣಿ ಚಿತ್ರ
ಬಿಜೆಪಿ ಸದಸ್ಯ ರವಿಕುಮಾರ್ ಅವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್‌ನಲ್ಲಿ ಬುಧವಾರ ವಿರೋಧ ಪಕ್ಷದ ಸದಸ್ಯರು ಧರಣಿ ನಡೆಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ವಿಧಾನ ಪರಿಷತ್‌ನಲ್ಲಿಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಸದಸ್ಯ ಎನ್.ರವಿಕುಮಾರ್ ವಿರುದ್ಧ ಕ್ರಮಕೈಗೊಳ್ಳುವ ವಿಷಯವನ್ನು ನೀತಿ ನಿರೂಪಣಾ ಸಮಿತಿಗೆ ನೀಡುವ ಬಗ್ಗೆ ಪರಿಶೀಲಿಸುವುದಾಗಿ ಸಭಾಪತಿ ಭರವಸೆ ನೀಡಿದ ಮೇರೆಗೆ ವಿರೋಧ ಪಕ್ಷಗಳು ಪ್ರತಿಭಟನೆ ಹಿಂಪಡೆದುಕೊಂಡವು.

ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷಗಳ ಸದಸ್ಯರು ಸಭಾಪತಿ ಪೀಠದ ಮುಂಭಾಗ ಪ್ರತಿಭಟನೆ ಮುಂದುವರಿಸಿದರು. ಸ್ಪಷ್ಟೀಕರಣ ಕೊಡಲುರವಿಕುಮಾರ್‌ಗೆ ಅವಕಾಶ ಕೊಡಲಾಯಿತು.

‘ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಹೇಡಿ ಎಂದು ಕರೆದ ದೊರೆಸ್ವಾಮಿ ಅವರ ವಿಚಾರದಲ್ಲಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’ ಎಂದು ರವಿಕುಮಾರ್‌ ಸ್ಪಷ್ಟಪಡಿಸಿದರು.

ADVERTISEMENT

ವಿಷಾದ ಸೂಚಿಸುವ ಬದಲಿಗೆ ಭಾಷಣ ಮಾಡಲು ಮುಂದಾದ ರವಿಕುಮಾರ್‌ ವಿರುದ್ಧ ವಿರೋಧ ಪಕ್ಷದ ಸದಸ್ಯರು ಧಿಕ್ಕಾರ ಕೂಗಿದರು. 15 ನಿಮಿಷ ಮಾತಿಗೆ ಅವಕಾಶ ಕೇಳಿದ ಅವರ ಮಾತನ್ನು ಪೂರ್ತಿ ಕೇಳಬೇಕು ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು. ಆದರೆ ಇದಕ್ಕೆ ಸದಸ್ಯರು ಒಪ್ಪಲಿಲ್ಲ.

ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಅವರು, ನಿಯಮ 242 ಬಿ ಅಡಿಯಲ್ಲಿ ನೀತಿ ನಿರೂಪಣಾ ಸಮಿತಿಗೆ ಈ ವಿಷಯ ವಹಿಸುವಂತೆ ತಾವು ಅರ್ಜಿ ಸಲ್ಲಿಸಿದ್ದಾಗಿ ತಿಳಿಸಿದರು. ಅದಕ್ಕೆ ಸಮ್ಮತಿ ಸೂಚಿಸಿದ ಸಭಾಪತಿ ಕೆ.ಪ್ರತಾ‍ಪಚಂದ್ರ ಶೆಟ್ಟಿ, ಇದು ಸಮಿತಿಗೆ ವಹಿಸುವ ಸೂಕ್ತ ಪ್ರಕರಣವೇ ಎಂಬುದನ್ನು ಪರಿಶೀಲಿಸಿದ ಬಳಿಕ ನಿರ್ಧಾರಕ್ಕೆ ಬರುವುದಾಗಿ ಹೇಳಿದರು. ವಿರೋಧ ಪಕ್ಷದ ಸದಸ್ಯರು ಧರಣಿ ಕೈಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.