ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಝುಂಜರವಾಡದಲ್ಲಿ ಬುಧವಾರ ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದಪ್ಪ ಮುದುಕಣ್ಣವರ ಅವರನ್ನು ನೆರೆ ಸಂತ್ರಸ್ತರು ಶೆಡ್ನಲ್ಲಿ ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಕೃಷ್ಣಾ ನದಿ ಪ್ರವಾಹಕ್ಕೆ ತುತ್ತಾಗಿ ಮನೆ, ಆಸ್ತಿಪಾಸ್ತಿ ಕಳೆದುಕೊಂಡಿರುವ ಸಂತ್ರಸ್ತರು, ಸಮರ್ಪಕ ಪರಿಹಾರ ಬಂದಿಲ್ಲದಿರುವುದಕ್ಕೆ ಬಿಸಿ ಮುಟ್ಟಿಸಿದರು. ‘ಪರಿಹಾರ ಸಿಗುವವರೆಗೆ ನಾವು ಮತದಾನ ಮಾಡುವುದಿಲ್ಲ. ನಮ್ಮ ಗ್ರಾಮಕ್ಕೆ ಪ್ರಚಾರ ಮಾಡಬೇಡಿ. ಚುನಾವಣೆ ಬಂದಾಗ ಮಾತ್ರ ಎಲ್ಲರೂ ಬರುತ್ತೀರಿ’ ಎಂದು ತರಾಟೆಗೆ ತೆಗೆದುಕೊಂಡರು.
ಇದರಿಂದ ಕಕ್ಕಾಬಿಕ್ಕಿಯಾದ ಸಿದ್ದಪ್ಪ, ‘ತಹಶೀಲ್ದಾರ್ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪ್ರಚಾರಕ್ಕೆ ಅವಕಾಶ ನೀಡುತ್ತಿಲ್ಲ. ನನ್ನನ್ನು ಕೂಡಿ ಹಾಕಿದ್ದಾರೆ’ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲ ಹೊತ್ತಿನ ಬಳಿಕ ಗ್ರಾಮಸ್ಥರು ಅವರನ್ನು ಬಿಟ್ಟು ಕಳುಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.