ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪಿ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ಜಾಮೀನು ಕೋರಿ ವಿನಯ ಕುಲಕರ್ಣಿ ಸಲ್ಲಸಿದ್ದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಸಿಬಿಐ, ‘ರಾಜಕೀಯ ಕಾರಣಗಳಿಗೆ ಈ ಹತ್ಯೆ ನಡೆದಿದೆ. ಪ್ರಕರಣದಲ್ಲಿ ವಿನಯ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. ಜಿಮ್ನಿಂದ ಹೊರ ಬರುವಾಗ ಯೋಗೇಶ್ ಗೌಡ ಕೊಲೆಯಾಗಿದೆ. ಆರೋಪಿಗಳು ಶರಣಾಗಿದ್ದರು. ಪ್ರತ್ಯಕ್ಷ ಸಾಕ್ಷ್ಯಗಳನ್ನು ಅರ್ಜಿದಾರರು ಬೆದರಿಸಿ ದೂರ ಉಳಿಯುವಂತೆ ನೋಡಿಕೊಂಡಿದ್ದರು. ಇದಕ್ಕೆ ಸ್ಥಳೀಯ ಪೊಲೀಸರು ಮತ್ತು ವಿನಯ ಕುಲಕರ್ಣಿ ಸಂಬಂಧಿಸಿಕರು ನೆರವು ನೀಡಿದ್ದರು ಎಂಬ ಅಂಶಗಳು ತನಿಖೆ ವೇಳೆ ಪತ್ತೆಯಾಗಿವೆ’ ಎಂದು ತಿಳಿಸಿದೆ. ಸಿಬಿಐ ಪರ ವಿಶೇಷ ವಕೀಲ ಪಿ. ಪ್ರಸನ್ನಕುಮಾರ್ ವಾದ ಮಂಡಿಸಿದ್ದರು.
ಈ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿ ನವೆಂಬರ್ 5ರಂದು ಬಂಧನಕ್ಕೆ ಒಳಗಾಗಿದ್ದರು. ಜಾಮೀನು ಕೋರಿ ಮೊದಲಿಗೆ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅಲ್ಲಿ ತಿರಸ್ಕಾರವಾದ ಬಳಿಕ ಹೈಕೋರ್ಟ್ ಧಾರವಾಡ ಪೀಠದಲ್ಲೂ ಅರ್ಜಿ ಸಲ್ಲಿಸಿದ್ದು, ಅಲ್ಲೂ ಜಾಮೀನು ದೊರೆತಿಲ್ಲ.
ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ಪ್ರಕರಣದ ಗಂಭೀರತೆ ಮತ್ತು ಸಿಬಿಐ ಆಕ್ಷೇಪಣೆ ಪುರಸ್ಕರಿಸಿರುವ ನ್ಯಾಯಾಲಯ, ಜಾಮೀನು ನೀಡಲು ನಿರಾಕರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.