ADVERTISEMENT

‘ವಿನಯ ಸಾಮರಸ್ಯ’ ಯೋಜನೆಗೆ ಡಿಸೆಂಬರ್‌ನಲ್ಲಿ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 18:22 IST
Last Updated 24 ನವೆಂಬರ್ 2022, 18:22 IST
ಅಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸುತ್ತಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಅಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸುತ್ತಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ   

ಬೆಂಗಳೂರು: ‘ಅಸ್ಪೃಶ್ಯತೆ ನಿವಾರಣೆಗಾಗಿ ರೂಪಿಸಿರುವ ‘ವಿನಯ ಸಾಮರಸ್ಯ’ ಯೋಜನೆಯ ಸಮಾವೇಶವನ್ನು ಡಿಸೆಂಬರ್ ಎರಡನೇ ವಾರದಲ್ಲಿ ಬೆಂಗಳೂರು ಅಥವಾ ಕೊಪ್ಪಳದಲ್ಲಿ ಏರ್ಪಡಿಸಲಾಗುವುದು. ಶೀಘ್ರದಲ್ಲಿಯೇ ದಿನ ಮತ್ತು ಸ್ಥಳ ಅಂತಿಮಗೊಳಿಸಲಾಗುವುದು’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವರು, ಯೋಜನೆ ಕುರಿತು ಇಲಾಖೆ ಅಧಿಕಾರಿಗಳ ಜೊತೆ ಗುರುವಾರ ವಿಡಿಯೊ ಸಂವಾದ ಮೂಲಕ ಸಭೆ ನಡೆಸಿದರು. ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದರು.

‘ಅಸ್ಪೃಶ್ಯತೆಯಂಥ ಅನಿಷ್ಟ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಬೇಕಿದೆ. ಪರಿಶಿಷ್ಟಯೇತರ ಸಮುದಾಯಗಳ ಧುರೀಣರು, ಮಠಾಧಿಪತಿಗಳು, ಧಾರ್ಮಿಕ ಮುಖಂಡರನ್ನೂ ಸಮಾವೇಶಕ್ಕೆ ಆಹ್ವಾನಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲೂ ಈ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಬೇಕಿದ್ದು ಸಿದ್ಧತೆ ಮಾಡಿ
ಕೊಳ್ಳಬೇಕು‘ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ADVERTISEMENT

ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪಿ. ಮಣಿವಣ್ಣನ್, ಇಲಾಖೆ ಸಲಹೆಗಾರ ಇ. ವೆಂಕಟಯ್ಯ, ಆಯುಕ್ತ ‌ಕೆ. ರಾಕೇಶ್‌ಕುಮಾರ್ಇದ್ದರು.

2021 ಸೆಪ್ಟೆಂಬರ್‌ನಲ್ಲಿ ಕೊಪ್ಪಳ ಜಿಲ್ಲೆ ಮಿಯಾಪುರದಲ್ಲಿ ವಿನಯ್‌ ಹೆಸರಿನ ದಲಿತ ಬಾಲಕ, ಮಾರುತಿ ದೇವಸ್ಥಾನ ಪ್ರವೇಶಿಸಿದ್ದರಿಂದ ಗ್ರಾಮದ ಸವರ್ಣೀಯರು ಬಾಲಕನ ಪೋಷಕರಿಗೆ ₹ 25 ಸಾವಿರ ದಂಡ ವಿಧಿಸಿ ಬಹಿಷ್ಕರಿಸಿದ್ದರು. ಸುದ್ದಿ ತಿಳಿದ ಜಿಲ್ಲಾಡಳಿತ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ವಿನಯ್
ಹೆಸರಿನಲ್ಲಿ ಅಸ್ಪೃಶ್ಯತೆ ನಿವಾರಣೆಯ ‘ವಿನಯ ಸಾಮರಸ್ಯ’ ಯೋಜನೆಯನ್ನು ಸರ್ಕಾರ ಘೋಷಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.