ADVERTISEMENT

ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಆದೇಶ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2023, 7:07 IST
Last Updated 20 ನವೆಂಬರ್ 2023, 7:07 IST
<div class="paragraphs"><p>ಶಿವಮೂರ್ತಿ ಮುರುಘಾ ಶರಣರ</p></div>

ಶಿವಮೂರ್ತಿ ಮುರುಘಾ ಶರಣರ

   

ಚಿತ್ರದುರ್ಗ: ಎರಡನೇ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ನೀಡಿ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಶಿವಮೂರ್ತಿ ಶರಣರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರಿಗೆ ಮಂಗಳವಾರದವರೆಗೆ ಕಾಲಾವಕಾಶ ನೀಡಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಸೋಮವಾರ ಆದೇಶ ಪ್ರಕಟಿಸಿದರು.

ADVERTISEMENT

ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ವಿಚಾರಣೆ ಮುಗಿಯುವವರೆಗೂ ಜಿಲ್ಲಾ ಗಡಿ ಪ್ರವೇಶಿಸದಂತೆ ಷರತ್ತು ವಿಧಿಸಿದೆ. ನ.16ರಂದು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಆಗಿದ್ದ ಶರಣರು, ದಾವಣಗೆರೆ ವಿರಕ್ತ ಮಠದಲ್ಲಿ ತಂಗಿದ್ದಾರೆ.

ಏನಿದು ಪ್ರಕರಣ?

ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿದ್ದ ಎರಡನೇ ಪೋಕ್ಸೊ ಪ್ರಕರಣದಲ್ಲಿ ಆರೋಪಿ ವಿರುದ್ಧ ಬಾಡಿ ವಾರೆಂಟ್ ಹೊರಡಿಸಲಾಗಿತ್ತು. ಮೊದಲ ಪ್ರಕರಣದಲ್ಲಿ ಜಾಮೀನು ಪಡೆದು ಕಾರಾಗೃಹದಿಂದ ಹೊರಬಂದರೂ ಎರಡನೇ ಪ್ರಕರಣದ ವಿಚಾರಣೆಗೆ ಶರಣರ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಶರಣರ ಪರ ವಕೀಲರು ಕೋರಿಕೆ ಸಲ್ಲಿಸಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರಿ ವಕೀಲರು, ಆರೋಪಿ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸುವಂತೆ ಕೋರಿಕೊಂಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಾದ- ಪ್ರತಿವಾದ ಆಲಿಸಿ ಸೋಮವಾರ ಬೆಳಿಗ್ಗೆ ಆದೇಶ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.