ADVERTISEMENT

ಭದ್ರಾ: ಮಧ್ಯರಾತ್ರಿಯಿಂದಲೇ ಎರಡೂ ನಾಲೆಗೆ ನೀರು

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 14:38 IST
Last Updated 22 ಜುಲೈ 2020, 14:38 IST
ಭದ್ರಾ ಜಲಾಶಯ.
ಭದ್ರಾ ಜಲಾಶಯ.   

ಶಿವಮೊಗ್ಗ: ಭದ್ರಾ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 22ರ ಮಧ್ಯರಾತ್ರಿಯಿಂದಲೇ ನೀರು ಹರಿಸಲಾಗಿದೆ.

ಮುಂಗಾರು ಹಂಗಾಮಿನ ಬೆಳೆಗಳಿಗೆ ಜುಲೈ 22ರ ಮಧ್ಯರಾತ್ರಿಯಿಂದ ಬಲದಂಡೆ ನಾಲೆ, ಎಡದಂಡೆ ನಾಲೆಗಳಲ್ಲಿ ನೀರನ್ನು ಹರಿಸಲಾಗುತ್ತಿದೆ. ಪ್ರಸ್ತುತ ಉತ್ತಮ ಮಳೆ ಸುರಿಯುತ್ತಿರುವ ಕಾರಣ ಬಲ ನಾಲೆಗೆ ಆರಂಭದಲ್ಲಿ 1,500 ಕ್ಯುಸೆಕ್ ನಂತರ ಪರಿಸ್ಥಿತಿ ನೋಡಿಕೊಂಡು‌ 2650 ಕ್ಯುಸೆಕ್‌ ಪೂರ್ಣ ಪ್ರಮಾಣದಲ್ಲಿ ನೀರು ಹರಿಸಲಾಗುತ್ತದೆ. ಎಡ ನಾಲೆಗೆ ಪ್ರಸ್ತುತ 300 ಕ್ಯುಸೆಕ್‌ ನಂತರ ಗರಿಷ್ಠ ಸಾಮರ್ಥ್ಯ 380 ಕ್ಯುಸೆಕ್ ಹರಿಸಲು ಭದ್ರಾ ‘ಕಾಡಾ’ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

1.80 ಲಕ್ಷ ಹೆಕ್ಟೇರ್‌ ಅಚ್ಚುಕಟ್ಟು:186 ಅಡಿ ನೀರು ನಿಲ್ಲುವ ಜಲಾಶಯದಲ್ಲಿ ಪ್ರಸ್ತುತ 153.2 ಅಡಿ ನೀರಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ಸುಮಾರು 1.80 ಲಕ್ಷ ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶಕ್ಕೆ ಭದ್ರಾ ಜಲಾಶಯ ನೀರುಣಿಸುತ್ತದೆ. ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ 75 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ಶಿವಮೊಗ್ಗ 10 ಸಾವಿರ, ದಾವಣಗೆರೆ 60 ಸಾವಿರ ಹಾಗೂ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ 5 ಸಾವಿರ ಹೆಕ್ಟೇರ್‌ ಭತ್ತ ಬೆಳೆಯುವ ಪ್ರದೇಶ. ಅಚ್ಚುಕಟ್ಟು ವ್ಯಾಪ್ತಿಯ ಅತಿದೊಡ್ಡ ಸೂಳೆಕೆರೆ ಸೇರಿದಂತೆ ಬಹುತೇಕ ಕೆರೆ ಕಟ್ಟೆಗಳು, ಪಿಕ್‌ಅಪ್‌ಗಳು ಜಲಾಶಯದ ನಾಲೆಯ ನೀರನ್ನೇ ಅವಲಂಬಿಸಿವೆ. ಸೂಳೆಕೆರೆ ನೀರು ಬಳಸಿಕೊಂಡು ಪ್ರತಿ ವರ್ಷ 2,800 ಹೆಕ್ಟೇರ್ ಭತ್ತ ಬೆಳೆಯಲಾಗುತ್ತಿದೆ.

ADVERTISEMENT

ನಾಲೆ ಪಾತ್ರದಲ್ಲಿ ಎಚ್ಚರಿಕೆ:ನಾಲೆ ಪಾತ್ರಗಳಲ್ಲಿ ಜನರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು, ತೋಟಗಾರಿಕೆ, ದೈನಂದಿನ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ ನೀರಾವರಿ ನಿಗಮಸ ಎಂಜಿನಿಯರ್‌ಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.