ಮೈಸೂರು: ಮೈಸೂರು ಹಾಗೂ ಮಂಡ್ಯದಲ್ಲಿ ಮಳೆಯ ಆರ್ಭಟ ಹೆಚ್ಚಿದೆ. ಮೈಸೂರಿನ ನಂಜನಗೂಡು ತಾಲ್ಲೂಕಿನ ಸುತ್ತೂರಿನ ಸೇತುವೆಯು ಮುಳುಗಡೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯ ಮಾರ್ಗವು ಜಲಾವೃತವಾಗಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಕಬಿನಿ ಜಲಾಶಯಿಂದ 77,500 ಕ್ಯುಸೆಕ್ ನೀರನ್ನು ಹೊರಬಿಡುತ್ತಿದ್ದು, ಸುತ್ತೂರಿನ ಸೇತುವೆ ನೀರಿನಲ್ಲಿ ಮುಳುಗಿದೆ. ಅಲ್ಲದೇ, ಸುತ್ತೂರು ಆಸುಪಾಸಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ನೀರಿನಿಂದ ಆವೃತವಾಗಿವೆ.
ತಾಲ್ಲೂಕಿನ ಮಲ್ಲನಮೂಲೆ ಮಠದ ಬಳಿಯೂ ನೀರಿನ ಮಟ್ಟ ಏರಿಕೆಯಾಗಿದ್ದು, ಮೈಸೂರಿನ ತಾಂಡವಪುರದ ಬಳಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಮಂಡ್ಯ ವರದಿ:
ಕೆಆರ್ಎಸ್ನಿಂದ 1,17,996 ಕ್ಯುಸೆಕ್ ನೀರು ಹೊರಬಿಡುತ್ತಿದ್ದು, ಶ್ರೀರಂಗಪಟ್ಟಣದಲ್ಲಿ ಪ್ರವಾಹ ಜೋರಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಐತಿಹಾಸಿಕ ವೆಲ್ಲೆಸ್ಲಿ ಸೇತುವೆಗೆ ತೆರಳುವ ಮಾರ್ಗ ಸೇರಿದಂತೆ, ಸೋಪಾನಕಟ್ಟೆ, ಜಿ.ಬಿ.ಗೇಟ್ ಬಳಿ ಬ್ಯಾರಿಕೇಡ್ಗಳನ್ನು ಹಾಕಿ ನದಿಯ ಬಳಿ ನಾಗರಿಕರು ತೆರಳದಂತೆ ಪ್ರವೇಶ ನಿರ್ಬಂಧಿಸಲಾಗಿದೆ. ಅಂತೆಯೇ, ಇಲ್ಲಿನ ಪಶ್ಚಿಮ ವಾಹಿನಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ನೀರಿನಿಂದ ಮುಳುಗಿದ್ದು, ರಸ್ತೆಯನ್ನು ಬಂದ್ ಮಾಡಲಾಗಿದೆ.
ಚಾಮರಾಜನಗರ ವರದಿ:
ಕಾವೇರಿ ನದಿಯ ಪ್ರವಾಹ ಹೆಚ್ಚಿರುವ ಕಾರಣ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇವನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.