ತುಮಕೂರು: ಲಿಂಗಾಯತ ಸಮುದಾಯದ ನೌಕರರಿಗೆ ಸರ್ಕಾರದಲ್ಲಿ ಮನ್ನಣೆ ಸಿಗದಿರುವ ಆರೋಪದ ಬಗ್ಗೆ ಪರಿಶೀಲಿಸಿ, ಸರಿಪಡಿಸಿಕೊಳ್ಳುವ ಕೆಲಸ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಾತಿ ಆಧಾರದ ಮೇಲೆ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆದರೆ ಜಾತಿ ಆಧಾರದ ಮೇಲೆ ಅಧಿಕಾರಿಗಳಿಗೆ ವರ್ಗಾವಣೆ, ನಿಯೋಜನೆ ಮಾಡುವುದಿಲ್ಲ. ಸಮರ್ಥರು, ಪ್ರಮಾಣಿಕರು, ಜನಪರವಾಗಿ ಕೆಲಸ ಮಾಡುವವರಿಗೆ ಅವಕಾಶಗಳು ಸಿಕ್ಕಿರುತ್ತವೆ’ ಎಂದು ತಿಳಿಸಿದರು.
‘ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ನೌಕರರು ನಾಯಿಪಾಡು ಅನುಭವಿಸುತ್ತಿದ್ದಾರೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈ ರೀತಿ ಏನಾದರೂ ಆಗಿದ್ದರೆ ಮುಖ್ಯಮಂತ್ರಿ ಗಮನಿಸಿ, ಸರಿಪಡಿಸುತ್ತಾರೆ ಎಂದರು.
ಸಾಹಿತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರ ಹಿಂದೆ ಯಾರಿದ್ದಾರೆ, ಯಾರು ಪತ್ರ ಬರೆಸುತ್ತಿದ್ದಾರೆ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಇಂತಹವರು ಯಾವ ಸರ್ಕಾರ ಇದ್ದರೂ ಬೆದರಿಕೆ ಹಾಕುತ್ತಾರೆ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.