ADVERTISEMENT

ಅಮೂಲ್ಯಾ ಹಿಂದೆ ಎಷ್ಟೇ ದೊಡ್ಡವರಿದ್ದರೂ ಬಿಡುವುದಿಲ್ಲ: ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 12:29 IST
Last Updated 25 ಫೆಬ್ರುವರಿ 2020, 12:29 IST
ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಚಿವ ಕೋಟ ಶ್ರೀನಿವಾಸ ಪೂಜಾರಿ   

ಬೆಳಗಾವಿ: ‘ಪಾಕ್‌ ಪರ ಘೋಷಣೆ ಕೂಗಿದ ಅಮೂಲ್ಯಾ ಲಿಯೋನ್‌ ಹಿಂದೆ ದೊಡ್ಡ ಷಡ್ಯಂತ್ರವಿದೆ. ಅವರು ಎಷ್ಟೇ ದೊಡ್ಡವರಿದ್ದರೂ ಸುಮ್ಮನೆ ಬಿಡುವುದಿಲ್ಲ. ಅವರ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ’ ಎಂದು ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

‘ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಕೆಲವು ಶಕ್ತಿಗಳು ವ್ಯವಸ್ಥಿತವಾಗಿ ಗಲಾಟೆ ಮಾಡುತ್ತಿವೆ. ಪ್ರತಿಭಟನೆಯಲ್ಲಿ, ರಾಷ್ಟ್ರೀಯತೆ ವಿರೋಧಿಸುವುದೂ ಕಂಡುಬರುತ್ತಿದೆ. ಪ್ರತಿಭಟನೆ ಹಾಗೂ ಭಾವನೆಗಳನ್ನು ಹೇಳಿಕೊಳ್ಳಲು ಎಲ್ಲರಿಗೂ ಅವಕಾಶವಿದೆ. ಆದರೆ, ಕಾನೂನು ಚೌಕಟ್ಟು ಮೀರಬಾರದು. ರಾಷ್ಟ್ರ ವಿರೋಧಿ ಭಾವನೆ ಹತ್ತಿಕ್ಕಲು ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಸಿಎಎ ವಿರುದ್ಧ ಪ್ರತಿಭಟಿಸುವವರ ಮೇಲೆ ಕಣ್ಣಿಡಲಾಗಿದೆ’ ಎಂದೂ ಹೇಳಿದರು.

ADVERTISEMENT

‘ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮುಜರಾಯಿ ದೇವಸ್ಥಾನಗಳಲ್ಲಿ ‘ಸಪ್ತಪದಿ’ ಯೋಜನೆಯಲ್ಲಿ ಸಾಮೂಹಿಕ ಸರಳ ವಿವಾಹ ಆಯೋಜಿಸಲು ಸಿದ್ಧತೆ ನಡೆದಿದೆ. ಈ ಬಗ್ಗೆ ಜಾಗೃತಿಗೆ ವಿಚಾರಸಂಕಿರಣಗಳನ್ನೂ ನಡೆಸಲಾಗುವುದು’ ಎಂದು ಹೇಳಿದರು.

‘ಇಲಾಖೆಯ ದೇಗುಲಗಳಲ್ಲಿ ನಕಲಿ ಅರ್ಚಕರು ಅಥವಾ ಪೂಜಾರಿಗಳಿರುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು. ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದರೆ ಪರಿಶೀಲಿಸಬೇಕು. ಆರೋಪ ನಿಜವಾದಲ್ಲಿ ಸಂಬಂಧಿಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಸೂಚಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.