ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳು ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 12 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ.
ಬೆಳಗಾವಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯ ಒಂದೆರಡು ಕಡೆ ಶುಕ್ರವಾರ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣಹವೆ ಇರಲಿದೆ. ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ತುಮಕೂರು, ಮಂಡ್ಯ, ಗದಗ, ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಬಿಸಿ ಗಾಳಿಯ ಅಲೆ ಹೆಚ್ಚಾಗುವ ಸಂಭವವಿದೆ. ಇದೇ 29ರವರೆಗೂ ರಾಜ್ಯದ ಬಹುತೇಕ ಕಡೆ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಏ.30ರಿಂದ ರಾಜ್ಯದ ವಿವಿಧೆಡೆ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.
ಮುಂದಿನ 5 ದಿನಗಳು ರಾಜ್ಯದಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಂಭವವಿದೆ. ಇದೇ 29ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಗುರುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ರಾಯಚೂರಿನಲ್ಲಿ ಗರಿಷ್ಠ (44.5 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ. ಕಲಬುರಗಿ, ರಾಯಚೂರು, ಕೊಪ್ಪಳ ಸೇರಿ 14 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಬೆಂಗಳೂರಿನಲ್ಲಿಯೂ ಗರಿಷ್ಠ ತಾಪಮಾನ ಹೆಚ್ಚಳವಾಗಿದ್ದು, 37.6 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.