ADVERTISEMENT

War: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಕೇಂದ್ರಕ್ಕೆ ಸಿ.ಎಸ್‌ ಪತ್ರ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 18:41 IST
Last Updated 1 ಮಾರ್ಚ್ 2026, 18:41 IST
<div class="paragraphs"><p>ಸಂಸತ್ ಭವನ</p></div>

ಸಂಸತ್ ಭವನ

   

ಬೆಂಗಳೂರು: ಯುದ್ಧಪೀಡಿತ ಪಶ್ಚಿಮ ಏಷ್ಯಾ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಹಾಗೂ ಅದಕ್ಕಾಗಿ ಅಗತ್ಯ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಪತ್ರ ಬರೆದಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರಿಗೆ ಪತ್ರ ಬರೆದಿರುವ ಅವರು, ಪಶ್ಚಿಮ ಏಷ್ಯಾ ದೇಶಗಳಲ್ಲಿ ಸೃಷ್ಟಿಯಾಗಿರುವ ಭೌಗೋಳಿಕ ರಾಜಕೀಯ ಬೆಳವಣಿಗೆ ಹಾಗೂ ಸೇನಾ ಚಟುವಟಿಕೆಗಳಿಂದ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾಗರಿಕರ ಸಂಚಾರ ಮೊಟಕು, ವಾಯು ಗಡಿ ನಿರ್ಬಂಧದಿಂದ ಅಲ್ಲಿನ ಭಾರತೀಯರಲ್ಲಿ ಆತಂಕ ಸೃಷ್ಟಿಯಾಗಿದೆ’ ಎಂದಿದ್ದಾರೆ.

ADVERTISEMENT

‘ದುಬೈ ಸೇರಿದಂತೆ ಪಶ್ಚಿಮ ಏಷ್ಯಾದ ದೇಶಗಳ ಮೇಲೆಯೂ ಯುದ್ಧ ಪರಿಸ್ಥಿತಿಯ ಪರಿಣಾಮ ಬಿದ್ದಿದೆ. ಉದ್ಯೋಗಕ್ಕಾಗಿ ಇಲ್ಲಿ ನೆಲಸಿರುವ ಕನ್ನಡಿಗರು, ಉನ್ನತ ಶಿಕ್ಷಣ, ವ್ಯವಹಾರ, ಪ್ರವಾಸ ಹಾಗೂ ಅಧಿಕೃತ ಕಾರ್ಯಕ್ರಮಗಳಿಗೆ ಹೋಗಿರುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ಭಾರತೀಯ ರಾಯಭಾರಿ, ಕಾನ್ಸುಲೇಟ್‌ ಕಚೇರಿಗಳ ಮೂಲಕ ಕನ್ನಡಿಗರಿಗೆ ಸುರಕ್ಷತೆ ಖಚಿತಪಡಿಸಬೇಕು. ಕರ್ನಾಟಕ ಹಾಗೂ ಭಾರತದ ವಿವಿಧ ರಾಜ್ಯಗಳ ಜನರನ್ನು ಆದ್ಯತೆ ಮೇಲೆ ತಾಯ್ನಾಡಿಗೆ ಕರೆತರಲು ವ್ಯವಸ್ಥೆ ಮಾಡಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಸಮೀರ್ ಕುಮಾರ್‌ ಸಿನ್ಹಾ ಅವರಿಗೆ ಪತ್ರ ಬರೆದಿರುವ ಶಾಲಿನಿ ರಜನೀಶ್, ‘ಯುದ್ಧದ ಸ್ಥಿತಿಯಲ್ಲಿರುವ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರು ವಾಪಸ್‌ ಟಿಕೆಟ್‌ ಬುಕ್‌ ಮಾಡಿದ್ದರೂ ವಿಮಾನಗಳ ಸೇವೆಯಲ್ಲಿ ಅಡಚಣೆ ಉಂಟಾಗಿದೆ. ಮಾರ್ಚ್‌ 2ರವರೆಗೆ ಎಲ್ಲ ವಿಮಾನ ಸೇವೆ ಬಂದ್‌ ಮಾಡಲಾಗಿದೆ. ವಿಮಾನಗಳ ಕಾರ್ಯಾಚರಣೆ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಕನ್ನಡಿಗರು ಸೇರಿದಂತೆ ದೇಶದ ಜನರನ್ನು ಸುರಕ್ಷಿತವಾಗಿ ವಾಪಸು ಕಳುಹಿಸಲು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.