ADVERTISEMENT

ಸೋಂಕಿತರ ಜೀವರಕ್ಷಣೆಗೆ ಕ್ರಮ ಏನು: ಕುಮಾರಸ್ವಾಮಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 18:12 IST
Last Updated 21 ಏಪ್ರಿಲ್ 2021, 18:12 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ‘ಕೋವಿಡ್‌ ತಡೆಯುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ. ಆದರೆ, ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರ ಜೀವ ಉಳಿಸಲು ಏನು ಕ್ರಮ ಕೈಗೊಂಡಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ‘ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಸರಣಿ ಸಭೆಗಳನ್ನು ಸರ್ಕಾರ ನಡೆಸಿದೆ. ವಿರೋಧ ಪಕ್ಷದ ನಾಯಕರ ಸಲಹೆ ಪಡೆದಿದೆ. ಆದರೆ, ಆಸ್ಪತ್ರೆಯಲ್ಲಿ ಇರುವವರ ರಕ್ಷಣೆಗೆ ಏನು ಮಾಡಲಾಗಿದೆ ಎಂಬುದನ್ನು ಸಭೆಯ ಬಳಿಕ ಸರ್ಕಾರ ಹೇಳಿಲ್ಲ. ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ’ ಎಂದು ಕೇಳಿದ್ದಾರೆ.

‘ಕೋವಿಡ್ ಎರಡನೇ ಅಲೆ ಬರುವ ಬಗ್ಗೆ ತಜ್ಞರು, ಪ್ರತಿಪಕ್ಷಗಳ ನಾಯಕರು ಹೇಳುತ್ತಲೇ ಬಂದಿದ್ದರು. ಔಷಧ, ಪರಿಕರಗಳ ಅಭಾವ ಇದೆ. ಆಮ್ಲಜನಕ, ರೆಮ್‌ಡಿಸಿವಿರ್ ಸಿಗುತ್ತಿಲ್ಲ. ಚಿಕಿತ್ಸೆಯೇ ದುರ್ಬಲವಾಗಿದೆ. ಈ ಸಂಬಂಧ ಹಲವು ಬಾರಿ ನಾನು ಎಚ್ಚರಿಕೆ ನೀಡಿದ್ದೇನೆ. ಆದರೂ, ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಚಿಕಿತ್ಸೆ ದೊರೆಯುವ ವಿಶ್ವಾಸ ಜನರಲ್ಲಿ ಕುಗ್ಗಿ ಹೋಗಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಆರೋಗ್ಯ ಸೇವೆ ಒದಗಿಸಲಾಗದ ಸರ್ಕಾರದ ದೈನೇಸಿ ಸ್ಥಿತಿ ಜನರಲ್ಲಿ ಆತಂಕ ಸೃಷ್ಟಿಸಿದೆ. ಜನರ ವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಏನೇನು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬುದನ್ನೂ ಜನರಿಗೆ ತಿಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.