ADVERTISEMENT

ನಿಮ್ಮ ಸರ್ಕಾರ ಟೇಕಾಫ್ ಆಗುವುದು ಯಾವಾಗ?: ಬಿಎಸ್‌ವೈಗೆ ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2019, 7:08 IST
Last Updated 27 ಆಗಸ್ಟ್ 2019, 7:08 IST
   

ಬೆಂಗಳೂರು:ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿರುವ ಅವರು, ರಾಜ್ಯದಲ್ಲಿಜನಪ್ರತಿನಿಧಿಗಳ ದನಿ ಉಡುಗಿಹೋಗಿ ಸಂವಿಧಾನೇತರ ಶಕ್ತಿಗಳೇ ವಿಜೃಂಭಿಸಿರುತ್ತಿರುವ ಹಾಗೆ ಕಾಣಿಸುತ್ತಿದೆ ಎಂದೂ ಟೀಕಿಸಿದ್ದಾರೆ.

‘ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರೇ, ನೀವು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು 3 ದಿನ,ಸಂಪುಟ ರಚನೆಗೆ 26 ದಿನಮತ್ತು ಖಾತೆ ಹಂಚಿಕೆಗೆ 6 ದಿನ ತಗೊಂಡಿರಿ.ಈಗ ಭಿನ್ನಮತ ಶಮನಕ್ಕೆ ಇನ್ನೆಷ್ಟು ದಿನ ಬೇಕು?ಈ ಎಲ್ಲದರ ನಡುವೆ ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ?’ ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತುಗಳನ್ನು ಗಮನಿಸಿದರೆ ಜನಪ್ರತಿನಿಧಿಗಳ ದನಿ ಉಡುಗಿಹೋಗಿ ಸಂವಿಧಾನೇತರ ಶಕ್ತಿಗಳೇ ವಿಜೃಂಭಿಸಿರುತ್ತಿರುವ ಹಾಗೆ ಕಾಣಿಸುತ್ತಿದೆ.
ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ ಎಂದೂ ಇನ್ನೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಿಎಸ್‌ವೈ ಬಗ್ಗೆ ಅನುಕಂಪ!

‘ಸ‌ನ್ಮಾನ್ಯ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪನವರುಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆಅವರ ರಾಜಕೀಯ ಎದುರಾಳಿಯಾದ ನನ್ನಂತಹವನಲ್ಲಿಯೂ ಅವರ ಬಗ್ಗೆ ಅನುಕಂಪ‌ ಮೂಡುವಂತಾಗಿದೆ’ ಎಂದೂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.