ಬೆಂಗಳೂರು: ‘ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ರಾಜಕಾರಣಿಗಳು ಮತ್ತುಚಿತ್ರನಟರ ಪ್ರವೇಶಕ್ಕೆ ಅನುಮತಿ ಕೊಟ್ಟವರು ಯಾರು’ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಪ್ರಶ್ನೆ ಮಾಡಿದೆ.
‘ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳನ್ನು ಸರ್ಕಾರ ಪಾಲಿಸುತ್ತಿಲ್ಲ’ ಎಂದುಲಿಟ್ಜ್ಕಿಟ್ ಫೌಂಡೇಶನ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
‘ಚುನಾಯಿತ ಪ್ರತಿನಿಧಿಗಳು ಮತ್ತು ಚಿತ್ರನಟರು ಭಾಗವಹಿಸುವುದು ರೂಢಿ. ಲೋಕಸಭೆ ಸದಸ್ಯೆ ಶೋಭಾ ಕರಂದ್ಲಾಜೆ ದೇವಸ್ಥಾನಕ್ಕೆ ಒಮ್ಮೆ ಭೇಟಿ ನೀಡಿದ್ದರು. ಅದೇ ರೀತಿ ದೇವಸ್ಥಾನ ಆಡಳಿತದ ಮನವಿ ಮೇರೆಗೆ ನಟ ದರ್ಶನ್ ಅವರಿಗೂ ಅವಕಾಶ ನೀಡಲಾಗಿತ್ತು. ಈ ಸಂದರ್ಭಗಳಲ್ಲಿ ನಿಯಮಗಳ ಉಲ್ಲಂಘನೆಯಾಗಿಲ್ಲ’ ಎಂದು ಸರ್ಕಾರ ವಿವರಣೆ ಸಲ್ಲಿಸಿದೆ.
‘ಆಯ್ದ ಕೆಲವರಿಗೇ ದೇವಸ್ಥಾನ ಪ್ರವೇಶ ಅನುಮತಿ ನೀಡಲು ನಿರ್ಧಾರ ಮಾಡಿದ್ದು ಯಾರು’ ಎಂದು ಪೀಠ ಮೌಖಿಕವಾಗಿ ಪ್ರಶ್ನಿಸಿತು. ‘ಪ್ರತಿ ಪ್ರಕರಣದ ಬಗ್ಗೆಯೂ ತನಿಖಾ ವರದಿಯನ್ನು ಸಲ್ಲಿಸಬೇಕು. ಅನುಮತಿ ನೀಡಿದವರು ಯಾರು, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ವರದಿ ಒಳಗೊಂಡಿರಬೇಕು’ ಎಂದು ಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.
‘ನಿಯಮ ಉಲ್ಲಂಘನೆಯಾಗಿದೆ ಎಂದು ಕಂಡು ಬಂದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಮಾರಂಭದಲ್ಲಿ ನಿಯಮಗಳು ಉಲ್ಲಂಘನೆಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿಯ ನಿಶ್ಚಿತಾರ್ಥ ಸಮಾರಂಭಕ್ಕೆ ಕೆಲವೇ ಕೆಲವರನ್ನು ಆಹ್ವಾನಿಸಲಾಗಿತ್ತು. ಇಲ್ಲಿಯೂ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ದೂರು ಬಂದಿಲ್ಲ’ ಎಂದು ಇತ್ತೀಚೆಗೆ ಸರ್ಕಾರ ಸ್ಪಷ್ಟಪಡಿಸಿದೆ.
‘ಬಳ್ಳಾರಿಯ ಕಾಂಗ್ರೆಸ್ ಮುಖಂಡ ಪಿ.ಟಿ. ಪರಮೇಶ್ವರನಾಯ್ಕ ಅವರು ಏರ್ಪಡಿಸಿದ್ದ ಮದುವೆ ಸಮಾರಂಭ, ಕಾಂಗ್ರೆಸ್ ನಾಯಕರು ನಡೆಸಿದ ಬೈಸಿಕಲ್ ರ್ಯಾಲಿಯಲ್ಲಿ ನಿಯಮ ಉಲ್ಲಂಘನೆ ಆಗಿರುವ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ವಿವರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.