ಬೆಂಗಳೂರು: ಹೋರಾಟಗಾರ ಮಾರುತಿ ಮಾನ್ಪಡೆ ಅವರ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾರಣ ಎಂಬ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ದೇಶದಲ್ಲಿ ಕೋವಿಡ್ನಿಂದ ಸಂಭವಿಸಿರುವ ಒಂದೂಕಾಲು ಲಕ್ಷ ಜನರ ಸಾವಿಗೆ ಯಾರು ಕಾರಣ ಎಂದು ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಮಂಗಳವಾರ ಸಿದ್ದರಾಮಯ್ಯ ಅವರು ಮಂಗಳವಾರ ಸರಣಿ ಟ್ವೀಟ್ ಮಾಡಿ, ಡಿ. ವಿ ಸದಾನಂದ ಗೌಡ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
‘ಮಾರುತಿ ಮಾನ್ಪಡೆ ಅವರ ಸಾವಿಗೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕಾರಣ ಎಂಬ ಬಾಲಿಶ ಹೇಳಿಕೆಯನ್ನು ಡಿ.ವಿ ಸದಾನಂದ ಗೌಡ ನೀಡಿದ್ದಾರೆ. ಹಾಗಿದ್ದರೆ ದೇಶದಲ್ಲಿ ಒಂದು ಕಾಲು ಲಕ್ಷ ಜನ ಕೊರೊನಾಕ್ಕೆ ಬಲಿಯಾಗಿದ್ದಾರಲ್ಲಾ ಅದಕ್ಕೆ ಯಾರು ಹೊಣೆ ಎಂದು ಹೇಳುವಿರಾ ಸದಾನಂದ ಗೌಡರೇ?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
‘ಕೊರೊನಾ ವಿರುದ್ಧ ಹೋರಾಡಬೇಕಾಗಿದ್ದ ಕೇಂದ್ರ ಸರ್ಕಾರ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಜನವಿರೋಧಿ ಕಾನೂನುಗಳನ್ನು ಜಾರಿಗೆ ತಂದದ್ದೇ ಮಾನ್ಪಡೆಯವರೂ ಸೇರಿದಂತೆ ಅನೇಕ ಹೋರಾಟಗಾರರ ಸಾವಿಗೆ ಕಾರಣ,’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಜರಾಜೇಶ್ವರಿ ನಗರಕ್ಕೆ ₹2000 ಕೋಟಿ ನೀಡಲಾಗಿತ್ತು
‘ಮುನಿರತ್ನ ತನಗೆ ಅನುದಾನ ನೀಡಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತೊರೆದದ್ದು ಎಂದು ಸುಳ್ಳು ಹೇಳುತ್ತಿದ್ದಾರೆ. ನನ್ನ ಅಧಿಕಾರಾವಧಿಯಲ್ಲಿ ಆರ್.ಆರ್ ನಗರ ಕ್ಷೇತ್ರಕ್ಕೆ ರೂ.2,000 ಕೋಟಿಗೂ ಅಧಿಕ ಅನುದಾನ ನೀಡಿದ್ದೆ, ಇಂದು ಕ್ಷೇತ್ರದಲ್ಲಿ ಏನಾದರೂ ಅಭಿವೃದ್ಧಿ ಕಾರ್ಯಗಳಾಗಿದ್ದರೆ ಅದಕ್ಕೆ ನಮ್ಮ ಸರ್ಕಾರ ಕಾರಣ,’ ಎಂದು ಸಿದ್ದರಾಮಯ್ಯ ಹೇಳಿದರು.
ಕೆ.ಆರ್ ಪೇಟೆಯಲ್ಲಿ ಹಣ ಹಂಚಿ ಗೆದ್ದಂತೆ ಶಿರಾ ಮತ್ತು ಆರ್.ಆರ್ ನಗರದಲ್ಲೂ ಹಣ ಹಂಚಿ ಸುಲಭದಲ್ಲಿ ಗೆಲ್ಲಬಹುದು ಎಂಬುದು ಬಿಜೆಪಿಯವರ ಲೆಕ್ಕಾಚಾರ. ಆದರೆ ಇಲ್ಲಿನ ಜನ ಹಣದ ಆಮಿಷಕ್ಕೆ ಒಳಗಾಗದೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.