ಬೆಂಗಳೂರು: ‘ಬೇಲೂರು ತಾಲ್ಲೂಕು ನಂದಗೋಡನಹಳ್ಳಿಯಲ್ಲಿ ಅಕ್ರಮವಾಗಿ ಮರಗಳ ಕಡಿತಲೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆದು, ತಪ್ಪಿತಸ್ಥರ ವಿರುದ್ಧ ಕ್ರಮ ಖಚಿತ. ಆದರೆ, ಅಕ್ರಮ ಮಾಡಿದವರ ಪರವಾಗಿ ಎಚ್.ಡಿ. ಕುಮಾರಸ್ವಾಮಿ ಯಾಕೆ ಮಾತನಾಡಿದ್ದಾರೋ ತಿಳಿಯುತ್ತಿಲ್ಲ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿದರು.
126 ಮರಗಳ ಅಕ್ರಮ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಖಂಡ್ರೆ, ‘ಮಾಜಿ ಮುಖ್ಯಮಂತ್ರಿಗೆ ಮಾಹಿತಿ ಕೊರತೆ ಇದೆ ಅನಿಸುತ್ತಿದೆ. ಮರ ಕಡಿಸಿ ಪ್ರತಾಪಸಿಂಹ ಸಹೋದರನ ಜಾಗದಲ್ಲಿ ಹಾಕುವಂತೆ ಮುಖ್ಯಮಂತ್ರಿಯೇ ಹೇಳಿದ್ದಾರೆಂದು ಅವರು ಆರೋಪಿಸಿರುವುದು ಹಾಸ್ಯಾಸ್ಪದ’ ಎಂದಿದ್ದಾರೆ.
‘ಕಾಡಿನಂತೆ ದಟ್ಟವಾದ ಮರಗಳು ಇರುವ ಸ್ಥಳದಲ್ಲಿ, ನೆರಳಿನಿಂದ ಕೂಡಿದ ನೂರಾರು ಮರ ಬೇರು ಬಿಟ್ಟಿರುವ ಜಮೀನಿನಲ್ಲಿ ಶುಂಠಿ ಬೆಳೆಯಲು ಸಾಧ್ಯವೇ ಎಂಬ ಬಗ್ಗೆ ಉತ್ತರ ನೀಡಲಿ. ಬೆಲೆ ಬಾಳುವ ಮರಗಳಿರುವ ಜಮೀನಿನಲ್ಲಿ ಶುಂಠಿ ಬೆಳೆಯಲು ವಿಕ್ರಂ ಸಿಂಹ ಅವರು ಕರಾರು ಮಾಡಿಕೊಂಡಿರುವುದರ ಹಿಂದಿನ ಉದ್ದೇಶ ಏನಿತ್ತು’ ಎಂದು ಪ್ರಶ್ನಿಸಿರುವ ಖಂಡ್ರೆ, ‘ಬಿಜೆಪಿಯವರೇ ಪ್ರತಾಪ ಸಿಂಹ ಪರ ನಿಲ್ಲದಿರುವಾಗ ಕುಮಾರಸ್ವಾಮಿ ಏಕೆ ಅವರ ಪರ ವಕಾಲತ್ತು ವಹಿಸುತ್ತಿದ್ದಾರೆ ಎನ್ನುವುದು ಅಚ್ಚರಿ ಉಂಟು ಮಾಡಿದೆ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.