ಬೆಂಗಳೂರು: ‘ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿರುವ ಸಂಘಟನೆಗಳು, ನಾವು (ಕಾಂಗ್ರೆಸ್) ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಎಲ್ಲಿಗೆ ಹೋಗಿದ್ದವು. ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರವನ್ನು ಈ ಸಂಘಟನೆಗಳು ಯಾಕೆ ಆಗ್ರಹಿಸುತ್ತಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ. ಇದರಲ್ಲಿ ರಾಜಕಾರಣ ಮಾಡುವುದರಲ್ಲಿ ಪ್ರಯೋಜನ ಇಲ್ಲ’ ಎಂದರು.
‘ಕಾವೇರಿ ನದಿ ನೀರಿನ ವಿಚಾರವಾಗಿ ಮಾತನಾಡುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರವನ್ನು ಏಕೆ ಆಗ್ರಹಿಸುತ್ತಿಲ್ಲ. ಪರಿಸರ ಇಲಾಖೆಯಿಂದ ಅನುಮತಿ ಯಾಕೆ ಕೊಡಿಸುತ್ತಿಲ್ಲ? ಈಗ ಹೋರಾಟ ಮಾಡುತ್ತಿರುವವರು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಲ್ಲವೇ’ ಎಂದೂ ಹೇಳಿದರು.
‘ರಾಜ್ಯದ ರೈತರ ಹಿತರಕ್ಷಣೆಗೆ ನ್ಯಾಯಾಲಯದಲ್ಲಿ ಹೋರಾಟ ಮಾಡಲು ನಾವು ಬದ್ಧರಾಗಿದ್ದೇವೆ. ಈ ವಿಚಾರವಾಗಿ ಕಾನೂನು ತಜ್ಞರ ತಂಡದ ಜತೆ ಚರ್ಚೆ ಮಾಡಿದ್ದೇನೆ. ಅಣೆಕಟ್ಟುಗಳ ವಾಸ್ತವ ಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿದ್ದೇವೆ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.