ADVERTISEMENT

ತನಿಖೆಗೆ ಆದೇಶಿಸದಿದ್ದರೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು: ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2022, 11:31 IST
Last Updated 18 ನವೆಂಬರ್ 2022, 11:31 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ಮತದಾರರ ಜಾಗೃತಿ ಹೆಸರಿನಲ್ಲಿ ಚಿಲುಮೆ ಫೌಂಡೇಷನ್‌ ಎಂಬ ಸಂಸ್ಥೆಯನ್ನು ಬಳಸಿಕೊಂಡು ರಾಜ್ಯ ಸರ್ಕಾರವೇ ಮತದಾರರ ಮಾಹಿತಿ ಕಳವು ಮಾಡಿರುವ ಕುರಿತು ಉನ್ನತಮಟ್ಟದ ತನಿಖೆಗೆ ಆದೇಶಿಸದಿದ್ದರೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಪ್ರಕರಣದ ಕುರಿತು ತನಿಖೆ ನಡೆಸುವಂತೆ ವಿಭಾಗೀಯ ಅಧಿಕಾರಿಗಳಿಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರ ಕಚೇರಿಯಿಂದ ನಿರ್ದೇಶನ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ. ಆದರೆ, ಇದು ವಿಭಾಗೀಯ ಅಧಿಕಾರಿಗಳ ಹಂತದಲ್ಲಿ ತನಿಖೆ ನಡೆಸುವಂತಹ ಪ್ರಕರಣವಲ್ಲ. ಚುನಾವಣಾ ಆಯೋಗದ ಅಧಿಕಾರಿಗಳನ್ನು ಶನಿವಾರ ಭೇಟಿಮಾಡಿ ಉನ್ನತಮಟ್ಟದ ತನಿಖೆಗೆ ಆಗ್ರಹಿಸಲಾಗುವುದು’ ಎಂದರು.

ಮತದಾರರ ಜಾಗೃತಿ ಹೆಸರಿನಲ್ಲಿ ಮಾಹಿತಿ ಕಳವು ಮಾಡಿರುವುದರ ಜತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಮಂದಿಯ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ದೂರುಗಳು ಕೇಳಿಬರುತ್ತಿವೆ. ಈ ತಂಡದಲ್ಲಿದ್ದ ಕೆಲವರು ರಾಜಕಾರಣಿಗಳನ್ನು ಸಂಪರ್ಕಿಸಿ ಚುನಾವಣೆಯಲ್ಲಿ ಗೆಲ್ಲಿಸುವ ಆಮಿಷವೊಡ್ಡಿ, ಕೋಟ್ಯಂತರ ರೂಪಾಯಿಗೆ ಬೇಡಿಕೆ ಇಟ್ಟಿರುವ ಮಾಹಿತಿ ಇದೆ. ಈ ಎಲ್ಲ ಆರೋಪಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಚಿಲುಮೆ ಫೌಂಡೇಷನ್‌ ಮೂಲಕ ನಡೆದಿರುವ ಮತದಾರರ ಮಾಹಿತಿ ಕಳವಿನ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಘುವಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರು ನಗರದ ಉಸ್ತುವಾರಿ ಸಚಿವರು. ನೇರವಾಗಿ ಅವರ ಅಧೀನದಲ್ಲೇ ಈ ಅಕ್ರಮ ನಡೆದಿದೆ. ಪಾಲಿಕೆ ಆಯುಕ್ತರು ಅಕ್ರಮ ನಡೆದಿರುವುದನ್ನು ಒಪ್ಪಿಕೊಂಡು ಚಿಲುಮೆ ಫೌಂಡೇಷನ್‌ಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಿದ್ದಾರೆ. ಆದರೆ, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

‘ಸಂಸ್ಥೆಯ ಅಧ್ಯಕ್ಷ ರವಿಕುಮಾರ್‌ ಅವರಿಗೆ ಮುಖ್ಯಮಂತ್ರಿ ಹಾಗೂ ಸಚಿವರು ರಕ್ಷಣೆ ನೀಡುತ್ತಿದ್ದಾರೆ. ಬಿಬಿಎಂಪಿ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಸೃಷ್ಟಿಸಿದವರು, ಅದನ್ನು ಬಳಸಿಕೊಂಡು ಅಕ್ರಮ ಎಸಗಿದವರು ಸೇರಿದಂತೆ ಎಲ್ಲರ ವಿರುದ್ಧವೂ ಕಠಿಣ ಕ್ರಮ ಆಗಬೇಕು’ ಎಂದರು.

‘ಕಾಂಗ್ರೆಸ್‌ ಆಡಳಿತದ ಕಾಲದಲ್ಲೂ ಇಂತಹ ಘಟನೆ ನಡೆದಿತ್ತು ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಅಂತಹ ಯಾವುದೇ ಪ್ರಕರಣ ನಡೆದಿದ್ದರೆ, ಯಾರೇ ಭಾಗಿಯಾಗಿದ್ದರೂ ಕ್ರಮ ಜರುಗಿಸಲಿ’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.