ADVERTISEMENT

ಬಿಜೆಪಿಯಲ್ಲೇ ಮುಂದುವರಿಯುವೆ: ವಿ. ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 16:26 IST
Last Updated 14 ಮಾರ್ಚ್ 2023, 16:26 IST
ವಿ. ಸೋಮಣ್ಣ
ವಿ. ಸೋಮಣ್ಣ   

ಬೆಂಗಳೂರು: ‘ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಟಿಕೆಟ್‌ ಕೊಟ್ಟರೆ ಸ್ಪರ್ಧಿಸುವೆ, ಇಲ್ಲವಾದರೆ ಪಕ್ಷಕ್ಕಾಗಿ ಕೆಲಸ ಮಾಡಿಕೊಂಡಿರುವೆ’ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷ ತ್ಯಜಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಜತೆ ವಿಮಾನದಲ್ಲಿ ಪ್ರಯಾಣಿಸುತ್ತಿರುವ ಫೋಟೊ ಹರಿಯಬಿಟ್ಟು ವದಂತಿ ಹಬ್ಬಿಸಲಾಗಿದೆ’ ಎಂದು ಕಣ್ಣೀರು ಹಾಕಿದರು.

‘ಬಿಜೆಪಿಯಲ್ಲಿ ನನಗೆ ಯಾವ ಅಸಮಾಧಾನವೂ ಇಲ್ಲ. ಯಾವುದೇ ನಾಯಕರು ಅಗೌರವ ಆಗುವ ರೀತಿ ನಡೆದುಕೊಂಡಿಲ್ಲ. ನಾನು ಕೂಡ ಪಕ್ಷಕ್ಕೆ ಮುಜುಗರ ಆಗುವಂತೆ ವರ್ತಿಸಿಲ್ಲ. ನನಗೆ ಅವಮಾನ ಆಗಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೆ. ನಾನು ಯಾರ ಮುಲಾಜಿನಲ್ಲೂ ಇಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಸುಮ್ಮನಿರುವುದಿಲ್ಲ’ ಎಂದರು.

ADVERTISEMENT

‘ಡಬಲ್‌ ಸ್ಟ್ಯಾಂಡರ್ಡ್‌ ರಾಜಕಾರಣ ನನಗೆ ಗೊತ್ತಿಲ್ಲ. ಪಿಗ್ಮಿ ಸಂಗ್ರಹಿಸಿ, ಕಸ್ತೂರಿ ಮಾತ್ರೆ ಮಾರಾಟ ಮಾಡಿ ಜೀವನ ನಿರ್ವಹಣೆ ಮಾಡಿದ್ದೇನೆ. ರಾಜಕೀಯದಲ್ಲಿ ಅವಕಾಶ ಸಿಕ್ಕಾಗ ಜನರ ಕೆಲಸ ಮಾಡಿದ್ದೇನೆ. ರಾತ್ರಿ ಕೆಲಸ ಮಾಡಿ ನನಗೆ ಗೊತ್ತಿಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ, ಖಳನಾಯಕನಂತೆ ಬಿಂಬಿಸಬೇಡಿ. ವದಂತಿಗಳಿಗೆ ತುಪ್ಪ ಸುರಿದು ತೇಜೋವಧೆ ಮಾಡಬೇಡಿ’ ಎಂದು ಪತ್ರಕರ್ತರಲ್ಲಿ ಮನವಿ ಮಾಡಿದರು.

‘ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ನೀಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಟಿಕೆಟ್‌ ಕೊಟ್ಟರೆ ಯಾವುದೇ ಕ್ಷೇತ್ರದಲ್ಲೂ ಸ್ಪರ್ಧಿಸುತ್ತೇನೆ. ಇಲ್ಲವಾದರೆ ಯಾರನ್ನೇ ಅಭ್ಯರ್ಥಿ ಮಾಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಹಲವು ಕ್ಷೇತ್ರಗಳ ಉಪ ಚುನಾವಣೆಯ ಜವಾಬ್ದಾರಿಯನ್ನು ಪಕ್ಷದ ನಾಯಕರು ನನಗೆ ವಹಿಸಿದ್ದರು. ಎಲ್ಲ ಕಡೆಗಳಲ್ಲೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದೇನೆ. ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿದ್ದೇನೆ. ನನ್ನ ಇತಿಮಿತಿಗಳು ಗೊತ್ತಿವೆ’ ಎಂದರು.

‘ಬಿ.ಎಸ್. ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರು. ಬಿಜೆಪಿ ಸೇರಿದ ಬಳಿಕ ಚುನಾವಣೆಯಲ್ಲಿ ಸೋತಿದ್ದೆ. ಆದರೂ ವಿಧಾನ ಪರಿಷತ್‌ ಸದಸ್ಯನನ್ನಾಗಿ ಮಾಡಿ ಮಂತ್ರಿ ಸ್ಥಾನದಲ್ಲಿ ಮುಂದುವರಿಸಿದರು. ಅವರನ್ನು ಎಂದಿಗೂ ಮರೆಯುವುದಿಲ್ಲ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಕೇಂದ್ರ ಸಚಿವ ಪ್ರಲ್ಹಾದ
ಜೋಶಿ ಕೂಡ ಆತ್ಮೀಯ ಸ್ನೇಹಿತರು’ ಎಂದ ಸೋಮಣ್ಣ, ಎಚ್‌.ಡಿ. ದೇವೇಗೌಡರ ಗುಣಗಾನವನ್ನೂ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.