ವಿಜಯಪುರ: ‘ಪಕ್ಷ ಸೂಚಿಸಿದರೆ ಉಪಮುಖ್ಯಮಂತ್ರಿ, ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧನಿದ್ದೇನೆ’ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
‘ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ಮತ್ತು ಮುಖ್ಯಮಂತ್ರಿ ಹೇಗೆ ಹೇಳುತ್ತಾರೋ ಹಾಗೆ ಕೇಳುತ್ತೇನೆ. ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದು, ಪಕ್ಷದ ನಿರ್ಣಯಕ್ಕೆ ಬದ್ಧನಾಗಿರುತ್ತೇನೆ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ‘ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ. ಸಂಪುಟ ವಿಸ್ತರಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಿನಿಗೂಡ್ಸ್, ಕ್ರೂಸರ್ ವಾಹನ: ‘ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಕಾರಿನ ಬದಲು ಮಿನಿಗೂಡ್ಸ್ ಮತ್ತು ಕ್ರೂಸರ್ ವಾಹನಗಳನ್ನು ವಿತರಿಸಲಾಗುವುದು’ ಎಂದು ಉಪಮುಖ್ಯಮಂತ್ರಿ ಕಾರಜೋಳ ಹೇಳಿದರು.
‘ಈ ಹಿಂದಿನ ಸರ್ಕಾರ ಐರಾವತ ಯೋಜನೆಯಡಿ, ಕಾರು ಖರೀದಿಸುವ ಫಲಾನುಭವಿಗೆ ₹5 ಲಕ್ಷ ಆರ್ಥಿಕ ನೆರವು ನೀಡಿತ್ತು. ಆದರೆ, ಸಾರ್ವಜನಿಕರು ಕಾರುಗಳನ್ನು ಬಾಡಿಗೆ ಪಡೆಯದ್ದರಿಂದ ಫಲಾನುಭವಿಗಳು ಬ್ಯಾಂಕ್ ಸಾಲ ಮರುಪಾವತಿಸಲು ಪರದಾಡುವಂತಾಗಿದೆ. ಹೀಗಾಗಿ, ಮಿನಿಗೂಡ್ಸ್ ಮತ್ತು ಕ್ರೂಸರ್ ವಾಹನಗಳಿಗೆ ನೆರವು ನೀಡಲು ತೀರ್ಮಾನಿಸಲಾಗಿದ್ದು, ಮುಂಬರುವ ಬಜೆಟ್ನಲ್ಲಿ ಈ ಯೋಜನೆ ಜಾರಿಗೆ ತರಲಾಗುವುದು’ ಎಂದು ತಿಳಿಸಿದರು.
‘ವಾಹನದ ಒಟ್ಟು ಮೊತ್ತದ ಶೇ 50ರಷ್ಟು ಆರ್ಥಿಕ ನೆರವನ್ನು ಸರ್ಕಾರದಿಂದ ನೀಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.