ADVERTISEMENT

ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ಚಿಂತನೆ: ಅಶೋಕ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 19:34 IST
Last Updated 23 ಜೂನ್ 2021, 19:34 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ರೈತರಿಗೆ ನೆರವಾಗುವ ಉದ್ದೇಶದಿಂದ ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ 70 ಸಾವಿರ ಎಕರೆಗಿಂತಲೂ ಹೆಚ್ಚಿನ ಭೂಮಿ ಇನಾಂ ವ್ಯಾಪ್ತಿಯಲ್ಲಿದೆ. ರಾಜ– ಮಹಾರಾಜರು, ಬ್ರಿಟಿಷ್‌ ಕಾಲದಲ್ಲಿ 500 ರಿಂದ 1000 ಎಕರೆಯಷ್ಟು ಇನಾಂ ಜಮೀನುಗಳನ್ನು ನೀಡಲಾಗಿತ್ತು ಎಂದರು.

ರೈತರು ಅಲ್ಲಿ ಉಳುಮೆ ಮಾಡಿಕೊಂಡಿದ್ದರು. ಇನಾಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ರೈತರಿಗೆ ಪಹಣಿ ಕೊಡುವ ಕೆಲಸ ಕೂಡಾ ಆಗುತ್ತಿತ್ತು. ಇನಾಂ ಕಾಯ್ದೆ ರದ್ದಾದಾಗ ತಿಳಿವಳಿಕೆಯ ಕೊರತೆಯಿಂದ ಲಕ್ಷಾಂತರ ರೈತರು ಅರ್ಜಿಯನ್ನೇ ಸಲ್ಲಿಸಿರಲಿಲ್ಲ. ಈಗ ಅವರಿಗೊಂದು ಅವಕಾಶ ನೀಡುವ ನಿಟ್ಟಿನಲ್ಲಿ ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ADVERTISEMENT

ರಾಜ್ಯದ ಬೇರೆ ಬೇರೆ ಭಾಗಗಳಲ್ಲಿದ್ದ 70 ಸಾವಿರ ಎಕರೆ ಇನಾಂ ಜಮೀನು ಕುರಿತು ಪರಿಶೀಲನೆ ನಡೆಸಿ ವರದಿ ನೀಡಲು ನಿವೃತ್ತ ಅಧಿಕಾರಿ ಪಿ.ಎಸ್‌.ವಸ್ತ್ರದ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆ ಸಮಿತಿಯು ರೈತರಿಗೆ ಅರ್ಜಿ ಸಲ್ಲಿಸಲು ಒಂದಿಷ್ಟು ಕಾಲಾವಕಾಶ ನೀಡಬೇಕು ಎಂದು ಶಿಫಾರಸ್ಸು ಮಾಡಿತ್ತು. ಈ ಕಾರಣದಿಂದ ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದರು.

ಸತೀಶ್‌ ರೆಡ್ಡಿ ಪಾತ್ರ ಇಲ್ಲ: ಬೆಡ್‌ ಬ್ಲಾಕಿಂಗ್‌ ದಂಧೆಯಲ್ಲಿ ಶಾಸಕ ಸತೀಶ್‌ ರೆಡ್ಡಿಯವರ ಪಾತ್ರ ಇಲ್ಲ ಎಂದು ತಿಳಿದು ಬಂದಿದೆ. ಅವರ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿರುವುದರಿಂದ ಅವರಿಗೂ ಬೇಸರವಾಗಿದೆ ಎಂದು ಅಶೋಕ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.