ಮುಖ್ಯಮಂತ್ರಿ ಸಿದ್ದರಾಮಯ್ಯ
ಸುವರ್ಣ ವಿಧಾನಸೌಧ (ಬೆಳಗಾವಿ): ‘ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
‘ಗೃಹಲಕ್ಷ್ಮಿ’ ಫಲಾನುಭವಿಗಳ ಜೊತೆ ಬುಧವಾರ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಅವಕಾಶಗಳನ್ನು ಸೃಷ್ಟಿಸಿಕೊಂಡ 20ಕ್ಕೂ ಹೆಚ್ಚು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದೇನೆ. ಈ ಯೋಜನೆಯಿಂದ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ಅವರು ವಿವರಿಸಿದರು’ ಎಂದರು.
‘ಗೃಹಲಕ್ಷ್ಮಿ ಯೋಜನೆಯು ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ, ಇಂದಿನ ಕಾರ್ಯಕ್ರಮಕ್ಕೆ ಅತ್ತೆ–ಸೊಸೆಯರು ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ. ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ’ ಎಂದರು.
ಎಐಸಿಸಿ ಅಧಿವೇಶನಕ್ಕೆ ಅಡ್ಡಿಪಡಿಸಿದರೆ ಕ್ರಮ: ಎಐಸಿಸಿ ಅಧಿವೇಶನದ ದಿನವೇ ಬಿಜೆಪಿಯವರು ವಕ್ಫ್ ಹೋರಾಟ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸದೇ ಹೋಗಿದ್ದರೆ, ಎಲ್ಲರೂ ಸ್ವತಂತ್ರವಾಗಿರಲು ಸಾಧ್ಯವಾಗುತ್ತಿತ್ತೇ? ಸಂವಿಧಾನ ರಚನೆಯಾದ ನಂತರವೇ ಇಂತಹ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗಿರುವುದು. ಮಹಾತ್ಮಾಗಾಂಧಿ ಆಧರಿಸಿದ ಎಐಸಿಸಿ ಅಧಿವೇಶನವನ್ನು ಅಡ್ಡಿಪಡಿಸಿದರೆ ಕಾನೂನಿನ ರೀತಿ ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
‘ಹೆಡಗೇವಾರ್, ಗೋಳ್ವಾಲ್ಕರ್, ಸಾವರ್ಕರ್ ಸೇರಿದಂತೆ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಭಾರತೀಯತೆಯಲ್ಲಿ ನಂಬಿಕೆಯಿರಿಸದಿರುವ ಬಿಜೆಪಿಯವರು ಮನುಸ್ಮೃತಿಗೆ ಒತ್ತು ನೀಡುವವರಾಗಿದ್ದಾರೆ’ ಎಂದರು.
ಬಿಜೆಪಿಗೆ ನೈತಿಕತೆ ಇಲ್ಲ: ‘₹150 ಕೋಟಿ ಆಮಿಷ ಮತ್ತು ವಕ್ಫ್ ಪ್ರಕರಣಗಳನ್ನು ಸಿಬಿಐಗೆ ನೀಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ‘2008ರಿಂದ 2013ರವರೆಗೆ ಹಾಗೂ 2018ರಿಂದ 2023ರವರೆಗೆ ಬಿಜೆಪಿಯವರು ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆಯೇ? ಅವರಿಗೆ ಈ ರೀತಿ ಹೇಳಲು ಯಾವುದೇ ನೈತಿಕತೆ ಇಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.