ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೇಕಲ್ ನಲ್ಲಿ ₹10,813 ಕೋಟಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಡಿಗಲ್ಲು, ಉದ್ಘಾಟನೆ ನೆರವೇರಿಸಲಿದ್ದಾರೆ.
ಸ್ಕಾಡಾ ತಂತ್ರಜ್ಞಾನದ ಮೂಲಕ ಬಸವಸಾಗರ ಜಲಾಶಯದ ಕಾಲುವೆಯ ಗೇಟ್ ಗಳನ್ನು ಕಂಟ್ರೋಲ್ ರೂಂ ಮೂಲಕ ನಿಯಂತ್ರಿಸುವ ಯೋಜನೆ ಉದ್ಘಾಟನಾ ಹಾಗೂ ಎಕ್ಸ್ಪ್ರೆಸ್ ವೇ, ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಿದ್ದಾರೆ.
ಕೊಡೇಕಲ್ ಹೊರವಲಯದ ಹುಣಸಗಿ-ನಾರಾಯಣಪುರ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಜಿಲ್ಲಾಡಳಿತ ವತಿಯಿಂದ ಬೃಹತ್ ವೇದಿಕೆ ಸಜ್ಜುಗೊಳಿಸಲಾಗಿದೆ. ಕಾರ್ಯಕ್ರಮಕ್ಕೆ ₹10 ಕೋಟಿ ಅನುದಾನ ಬಿಡುಗಡೆಯಾಗಿದೆ. ಮೂರು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಎಲ್ಲಿ ನೋಡಿದರೂ ಖಾಕಿ ಪಡೆ ಕಾಣಿಸುತ್ತಿದೆ.
ಕಾರ್ಯಕ್ರಮಕ್ಕೆ ಬರುವ ಜನರಿಗೆ ಭೂರಿ ಭೋಜನ ವ್ಯವಸ್ಥೆ ಮಾಡಲಾಗಿದೆ. ಮುಖ್ಯ ವೇದಿಕೆ ಬಲಭಾಗದಲ್ಲಿ ಅಚ್ಚುಕಟ್ಟಾಗಿ ಅಡುಗೆ ತಯಾರಿ ಮಾಡಲಾಗಿದೆ.
ಉತ್ತರ ಕರ್ನಾಟಕ ಶೈಲಿಯಲ್ಲಿ 230 ಕೌಂಟರ್ ನಲ್ಲಿ ಗೋಧಿ ಹುಗ್ಗಿ, ಪಲಾವ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 300-350 ಬಾಣಸಿಗರಿಂದ ಅಡುಗೆ ತಯಾರಿ ನಡೆದಿದೆ.
ವಿವಿಧ ಕಲಾ ತಂಡಗಳು ವೀರಗಾಸೆ ಸೇರಿದಂತೆ ಇನ್ನಿತರ ಪ್ರದರ್ಶನ ನೀಡುತ್ತಿವೆ. ಖಾಸಗಿ ವಾಹನಗಳಿಂದ ತಂಡೋಪ ತಂಡವಾಗಿ ಸಾರ್ವಜನಿಕರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸುತ್ತಿದ್ದಾರೆ.
ಮೋದಿ ಭಾವಚಿತ್ರಗಳನ್ನು ಹಿಡಿದು ಸಾರ್ವಜನಿಕರು ಸಂಭ್ರಮಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.