ADVERTISEMENT

ಕಾಂಗ್ರೆಸ್– ಜೆಡಿಎಸ್‌ ನಿರ್ಧಾರದ ಮೇಲೆ ರಾಜ್ಯ ರಾಜಕಾರಣ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 24 ಮೇ 2019, 4:43 IST
Last Updated 24 ಮೇ 2019, 4:43 IST
   

ಬೆಂಗಳೂರು: ನಾನು ಈಗಲೇ ಏನನ್ನು ಹೇಳುವುದಿಲ್ಲ, ಎರಡು ಮೂರು ದಿನಗಳಲ್ಲಿ ಕಾಂಗ್ರೆಸ್– ಜೆಡಿಎಸ್‌ ತೆಗೆದುಕೊಳ್ಳುವ ನಿರ್ಧಾರದ ಮೇಲೆ ರಾಜ್ಯದ ರಾಜಕಾರಣ ನಿಂತಿದೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೇ 29ಕ್ಕೆ ದೆಹಲಿಗೆ ತೆರಳುತ್ತಿದ್ದೇನೆ, ಅದೇ ದಿನ ನೂತನವಾಗಿ ಆಯ್ಕೆಯಾಗಿರುವ ಶಾಸಕರು ದೆಹಲಿಗೆ ಬರಲಿದ್ದಾರೆ, ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಜನರ ತಿರ್ಮಾನದಂತೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ನವರು ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ, ಸರ್ಕಾರದ ಅಳಿವು ಮತ್ತು ಉಳಿವಿನ ಬಗ್ಗೆ ನಾನು ಈಗಲೇ ಏನು ಹೇಳುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ADVERTISEMENT

ಯಡಿಯೂರಪ್ಪನವರು ಬಿಜೆಪಿ 22ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದರು. ಇದು ನಿಜವಾದ ಬಗ್ಗೆ ಪ್ರಶ್ನಿಸಿದಾಗ, ನಾನು 40 ವರ್ಷಗಳ ಕಾಲ ರಾಜ್ಯ ಸುತ್ತಿ ಅನುಭವ ಪಡೆದ ಆಧಾರದ ಮೇಲೆ ಹೇಳಿದ್ದೆ ಎಂದು ಅವರು ಹೇಳಿದರು.

ಸರ್ಕಾರ ರಚನೆ ಕುರಿತಂತೆ ನಾನು ಏನು ಹೇಳುವುದಿಲ್ಲ, ರಾಷ್ಟ್ರೀಯ ನಾಯಕರ ಜೊತೆ ಸಂಪರ್ಕ ಮಾಡಿ, ಮುಂದೆ ಏನು ಮಾಡಬೇಕು ಎಂದು ನಿರ್ಧರಿಸುವುದಾಗಿ ಯಡಿಯೂರಪ್ಪ ಹೇಳಿದರು.

ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುತ್ತಾರೋ ಎಂಬ ಪ್ರಶ್ನೆಗೆ, ನಾವಾಗಿಯೇ ಅವರನ್ನು ಕರೆಯುವುದಿಲ್ಲ, ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.