ಶೃಂಗೇರಿ: ‘ರಾಜ್ಯಕ್ಕೆ ಅಂಬರೀಷ್ ಕೊಡುಗೆ ಏನು’ ಎಂದು ಪ್ರಶ್ನಿಸುವ ಮೂಲಕ ಕುಮಾರಸ್ವಾಮಿ ಅವರು ಅಂಬಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.
‘ಅಂಬರೀಷ್ ಜೀವಂತವಿದ್ದಾಗ ಅವರ ಬಗ್ಗೆ ತುಂಬ ಅಭಿಮಾನವಿತ್ತು ಎಂದು ಹೇಳಿಕೊಂಡಿದ್ದವರು ಇಂತಹ ಹೇಳಿಕೆ ನೀಡಿದ್ದೇಕೆ’ ಎಂದು ಆಕ್ರೋಶವ್ಯಕ್ತಪಡಿಸಿದರು.
ಗುರುವಾರ ಶೃಂಗೇರಿಯ ಶಾರದಾ ಮಠಕ್ಕೆ ಭೇಟಿ ನೀಡಿದ್ದ ಬಿ.ಎಸ್.ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ಉಭಯ ಗುರುಗಳ ಆಶೀರ್ವಾದ ಪಡೆದು, ದೇವಿಯ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ರೈತಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಸುಮಲತಾ ಅಂಬರೀಷ್ ಅವರು ಬಿಜೆಪಿಗೆ ಬರುವ ನಿರ್ಧಾರ ತೆಗೆದುಕೊಳ್ಳುವುದು ಅವರಿಗೆ ಸಂಬಂಧಪಟ್ಟ ವಿಚಾರ ಎಂದೂ ಹೇಳಿದರು.
‘ಉಡುಪಿ– ಚಿಕ್ಕಮಗಳೂರು ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇಲ್ಲ. ಶೋಭಾ ಕರಂದ್ಲಾಜೆ ಅವರು ದೊಡ್ಡ ಅಂತರದಲ್ಲಿ ಜಯಗಳಿಸುತ್ತಾರೆ ಹಾಗೂ ರಾಜ್ಯದಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಸ್.ಎಂ.ಕೃಷ್ಣ ಮನೆಗೆಶುಕ್ರವಾರಸುಮಲತಾಭೇಟಿ
ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ಕಣಕ್ಕೆ ಇಳಿಯಲು ಸಕಲ ಸಿದ್ಧತೆ ನಡೆಸಿರುವ ಸುಮಲತಾ ಅಂಬರೀಷ್ ಅವರು ಬಿಜೆಪಿಯ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಶುಕ್ರವಾರ 12 ಗಂಟೆಗೆ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.
ಸುಮಲತಾ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಮಂಡ್ಯದಲ್ಲಿ ಟಿಕೆಟ್ ನೀಡಲು ಕಾಂಗ್ರೆಸ್ ನಿರಾಕರಿಸಿದೆ. 18ಕ್ಕೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಬೆಂಬಲಿಸಲು ಬಿಜೆಪಿ ಯೋಚಿಸಿದೆ. ಈ ಸಂಬಂಧ ಬಿಜೆಪಿ ಮುಖಂಡರ ಜತೆಗೆ ಅವರು ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಬೆಂಬಲ ಪಡೆಯುವುದು ಅವರ ಉದ್ದೇಶ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.