ADVERTISEMENT

ಉಸ್ತುವಾರಿ ಅರುಣ್ ಸಿಂಗ್ ಭೇಟಿಮಾಡಿದ ಯಡಿಯೂರಪ್ಪ: ಸಂಪುಟ ವಿಸ್ತರಣೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 9:11 IST
Last Updated 2 ಜನವರಿ 2021, 9:11 IST
ಯಡಿಯೂರಪ್ಪ
ಯಡಿಯೂರಪ್ಪ   

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಶನಿವಾರ ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ತ್ವರಿತವಾಗಿ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ನಡೆಯುವ ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ಸಭೆ ಮತ್ತು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ಅರುಣ್ ಸಿಂಗ್ ಅವರನ್ನು ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿಮಾಡಿದ ಯಡಿಯೂರಪ್ಪ, ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಜತೆಗಿದ್ದರು.

'ಗ್ರಾಮ ಪಂಚಾಯಿತಿ ಚುನಾವಣೆ ಮುಗಿದಿದೆ‌. ಪಕ್ಷದ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚುತ್ತಿದೆ. ಇನ್ನೂ ತಡ ಮಾಡುವುದು ಸರಿಯಲ್ಲ. ತಕ್ಷಣವೇ ಹೈಕಮಾಂಡ್ ನಿಂದ ಒಪ್ಪಿಗೆ ದೊರಕಿಸಿಕೊಡಿ' ಎಂಬುದಾಗಿ ಯಡಿಯೂರಪ್ಪ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆ ಚರ್ಚಿಸಿ ಒಪ್ಪಿಗೆ ಕೊಡಿಸುವುದಾಗಿ ಅರುಣ್ ಸಿಂಗ್ ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮುಖ್ಯಮಂತ್ರಿ ವಿರುದ್ಧ ಪಕ್ಷದ ಕೆಲವರು ಬಹಿರಂಗ ಹೇಳಿಕೆ ನೀಡುತ್ತಿರುವ ವಿಷಯವೂ ಮಾತುಕತೆ ವೇಳೆ ಪ್ರಸ್ತಾಪವಾಗಿದೆ. ಪದಾಧಿಕಾರಿಗಳ ಸಭೆ ಮತ್ತು ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಸ್ಪಷ್ಟವಾಗಿ ತಾಕೀತು ಮಾಡುವುದಾಗಿ ಸಿಂಗ್ ಹೇಳಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.