ADVERTISEMENT

15 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ, ‘ಯೆಲ್ಲೊ ಅಲರ್ಟ್‌’ ಘೋಷಣೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 3:11 IST
Last Updated 17 ನವೆಂಬರ್ 2021, 3:11 IST

ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನ.17 ಮತ್ತು 18ರಂದು ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನ.21ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೂ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ.

ADVERTISEMENT

ರಾಜ್ಯದ ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.2 ಮೀಟರ್‌ಗಳಷ್ಟು ಎತ್ತರದ ಅಲೆಗಳೂ ಏಳುವ ಸೂಚನೆಗಳು ಇರುವುದರಿಂದ ಮೀನುಗಾರರು ಸಮುದ್ರಕ್ಕೆಬುಧವಾರ ಇಳಿಯಬಾರದು ಎಂದು ಇಲಾಖೆ ಸೂಚಿಸಿದೆ.

ಮಳೆ–ಎಲ್ಲಿ, ಎಷ್ಟು?: ಕಾರವಾರದಲ್ಲಿ ಮಂಗಳವಾರ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಹಾಸನ 7, ಚಿಕ್ಕಬಳ್ಳಾಪುರ 6, ಬೆಂಗಳೂರು, ಚನ್ನಪಟ್ಟಣ 5, ಬೇಲೂರು, ಮಾಲೂರು, ನೆಲಮಂಗಲ, ತುಮಕೂರು, ಮಾಗಡಿ 4, ಕೊಪ್ಪ, ಗೌರಿಬಿದನೂರು, ರಾಮನಗರ, ಹೊಸಕೋಟೆ 3, ಸಾಗರ, ಮದ್ದೂರು, ತಿಪಟೂರು, ಶಿರಾ, ತೊಂಡೆಬಾವಿ, ಚಿಕ್ಕಮಗಳೂರು, ಕನಕಪುರ 2, ಭಟ್ಕಳ, ಗುಂಡ್ಲುಪೇಟೆ, ಕೊಳ್ಳೇಗಾಲ, ಅರಸೀಕೆರೆ, ಭದ್ರಾವತಿ, ಸೊರಬ, ಆನೇಕಲ್, ತೀರ್ಥಹಳ್ಳಿ, ತರೀಕೆರೆ, ಶಿಡ್ಲಘಟ್ಟದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ದಾವಣಗೆರೆಯಲ್ಲಿ 19 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.