ನವದೆಹಲಿ/ಬೆಂಗಳೂರು: ಭಾನುವಾರ ದೆಹಲಿಗೆ ತೆರಳಿ ರಾಷ್ಟ್ರೀಯ ಹಿರಿಯ ನಾಯಕರ ಜೊತೆಗೆ ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ರಾಜ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಪುಟ ವಿಸ್ತರಣೆ ಕುರಿತು ಶೀಘ್ರದಲ್ಲೇ 'ಗುಡ್ ನ್ಯೂಸ್' ಲಭಿಸಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಯಡಿಯೂರಪ್ಪ ಸಂಪುಟ ವಿಸ್ತರಣೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ವಿಸೃತವಾದ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು.
ಸಂಪುಟ ವಿಸ್ತರಣೆ ಕುರಿತಾಗಿ ವಿವರವಾದ ಚರ್ಚೆ ನಡೆಯಿತು. ಶೀಘ್ರದಲ್ಲೇ ನಿಮಗೆ ಶುಭ ಸಮಾಚಾರ ದೊರಕಲಿದೆ ಎಂದು ಸುದ್ದಿಗಾರರಿಗೆ ಯಡಿಯೂರಪ್ಪ ತಿಳಿಸಿದರು.
ಸಕಾರಾತ್ಮಕ, ಫಲಪ್ರದ ಮತ್ತು ತೃಪ್ತಿದಾಯಕ ಚರ್ಚೆ ನಡೆದಿದೆ. ಸಂಪುಟ ವಿಸ್ತರಣೆಗೆ ಶೀಘ್ರದಲ್ಲೇ ಅನುಮೋದನೆ ಸಿಗಲಿದ್ದು, ಆದಷ್ಟು ಬೇಗ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ಮಾತುಕತೆಯ ಬಗ್ಗೆ ನನಗೆ ತೃಪ್ತಿಯಿದೆ. ರಾಷ್ಟ್ರೀಯ ನಾಯಕರ ಸೂಚನೆಗಾಗಿ ನಾವು ಕಾಯುತ್ತೇವೆ ಎಂದು ಹೇಳಿದರು.
ಸಂಪುಟ ವಿಸ್ತರಣೆಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ನಾಯಕರೊಂದಿಗೆ ಇದು ಕೊನೆಯ ಸಭೆಯೇ ಎಂದು ಕೇಳಿದಾಗ, ಶೇಕಡಾ 101ರಷ್ಟು ಇದು ಅಂತಿಮ ಸಭೆ. ಅವರು ಆದಷ್ಟು ಬೇಗ ಹೆಸರುಗಳನ್ನು ಬಿಡುಗಡೆಗೊಳಿಸಲಿದ್ದಾರೆ ಎಂದು ಹೇಳಿದರು.
ಸಂಪುಣ ವಿಸ್ತರಣೆ ಜೊತೆಗೆ ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಯಾರು ಅಭ್ಯರ್ಥಿಯಾಗಬೇಕು ಮತ್ತು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ನಿರ್ವಹಣೆ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಸೃತ ಚರ್ಚೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.